ಎಚ್.ವಿಶ್ವನಾಥ್ಗೆ 15 ಕೋಟಿ: ಚುನಾವಣಾ ಆಯೋಗ, ಇಡಿಗೆ ದೂರು ನೀಡಿದ ಎಎಪಿ
ಬೆಂಗಳೂರು, ಡಿ. 19: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಎಚ್.ವಿಶ್ವನಾಥ್ರವರಿಗೆ 15 ಕೋಟಿ ರೂಪಾಯಿ ನೀಡಿರುವುದರ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
ಎಚ್.ವಿಶ್ವನಾಥ್ರವರಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಒಪ್ಪಿಕೊಂಡಿರುವ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯು ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ.
'ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ರವರಿಗೆ 15 ಕೋಟಿ ರೂಪಾಯಿ ಹಣ ನೀಡಿರುವುದು ಹಾಗೂ ಅದರಲ್ಲಿ ವಿಶ್ವನಾಥ್ರವರು 4 ರಿಂದ 5 ಕೋಟಿ ರೂಪಾಯಿಯನ್ನು ಖರ್ಚು ಮಾಡಿರುವ ಗಂಭೀರ ವಿಚಾರವನ್ನು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಹಿರಂಗ ಪಡಿಸಿದ್ದಾರೆ. ವಿ.ಶ್ರೀನಿವಾಸ್ ಪ್ರಸಾದ್ರವರು ಕೂಡ ಚುನಾವಣೆಗೆ ಹಣ ಪಡೆದಿದ್ದಾರೆ ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ' ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಹೇಳಿದರು.

'ಈ 15 ಕೋಟಿ ರೂಪಾಯಿಯನ್ನು ಬಿಜೆಪಿ ಹೇಗೆ ಸಂಪಾದಿಸಿತು..? ಅಭ್ಯರ್ಥಿ ಎಚ್.ವಿಶ್ವನಾಥ್ರವರಿಗೆ ಯಾಕಾಗಿ ವರ್ಗಾಯಿಸಲಾಯಿತು..? ವಿಶ್ವನಾಥ್ರವರು 4 ಅಥವಾ 5 ಕೋಟಿ ರೂಪಾಯಿಯನ್ನು ಹೇಗೆ ಖರ್ಚು ಮಾಡಿದರು..? ಉಳಿದ 10 ಕೋಟಿ ರೂಪಾಯಿ ಈಗ ಎಲ್ಲಿದೆ..? ಚುನಾವಣಾ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಕಂಡುಕೊಳ್ಳುವ ಅಗತ್ಯವಿದೆ. ಆದ್ದರಿಂದ ಚುನಾವಣಾ ಆಯೋಗ ಹಾಗೂ ಜಾರಿ ನಿರ್ದೇಶನಾಲಯವು ಸೂಕ್ತ ತನಿಖೆ ನಡೆಸಬೇಕು" ಎಂದು ಆಗ್ರಹಿಸಿದರು.
"ಇದೊಂದು ಬಹುದೊಡ್ಡ ಚುನಾವಣಾ ಅಕ್ರಮ. 2019 ರಲ್ಲಿದ್ದ ಚುನಾವಣಾ ಆಯೋಗದ ನೀತಿ ಸಂಹಿತೆ ಪ್ರಕಾರ ಅಭ್ಯರ್ಥಿಯು 28 ಲಕ್ಷ ರೂಪಾಯಿಯನ್ನು ಮಾತ್ರ ಖರ್ಚು ಮಾಡಲು ಅವಕಾಶ ಇರುತ್ತದೆ. ಬಿಜೆಪಿ ಸಂಸದರೇ ಬಹಿರಂಗವಾಗಿ ಒಪ್ಪಿಕೊಂಡಿರುವಂತೆ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ರವರು 4 ರಿಂದ 5 ಕೋಟಿ ರೂಪಾಯಿ ಖರ್ಚು ಮಾಡಿರುವುದು ಗರಿಷ್ಠ ಮಿತಿಗಿಂತ ಬರೋಬ್ಬರಿ 15 ಪಟ್ಟಿಗೂ ಹೆಚ್ಚು ಖರ್ಚು ಮಾಡಿದಂತಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು" ಎಂದರು.
ಇನ್ನು, ಪಕ್ಷದ ನಾಯಕ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, "ಕೋಟಿಗಟ್ಟಲೆ ಹಣ ಖರ್ಚು ಮಾಡಿ ಚುನಾವಣೆ ಎದುರಿಸುವುದಲ್ಲದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಅದನ್ನು ಹೇಳಿಕೊಳ್ಳುವ ಸ್ಥಿತಿಗೆ ರಾಜಕೀಯ ವ್ಯವಸ್ಥೆ ತಲುಪಿರುವುದು ನೋವಿನ ಸಂಗತಿ. ಎಚ್.ವಿಶ್ವನಾಥ್ ಹಾಗೂ ವಿ.ಶ್ರೀನಿವಾಸ್ ಪ್ರಸಾದ್ ಇವರಿಬ್ಬರನ್ನೂ ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು. ಬಿಜೆಪಿಯೇತರ ಪಕ್ಷಗಳ ನಾಯಕರ ವಿರುದ್ಧ ನಿರಾಧಾರ ಆರೋಪ ಕೇಳಿಬಂದರೂ ಜಾರಿ ನಿರ್ದೇಶನಾಲಯ ಶೀಘ್ರವೇ ದಾಳಿ ಮಾಡುತ್ತದೆ. ನಾಯಕರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸುತ್ತದೆ. ಆದರೆ ಬಿಜೆಪಿ ಅಭ್ಯರ್ಥಿಗೆ 15 ಕೋಟಿ ರೂಪಾಯಿ ನೀಡಿರುವುದನ್ನು ಸ್ವತಃ ಬಿಜೆಪಿ ಸಂಸದರೇ ಬಹಿರಂಗ ಪಡಿಸಿ ನಾಲ್ಕು ದಿನಗಳಾದರೂ ಇನ್ನೂ ಯಾವುದೇ ದಾಳಿ ಮಾಡದಿರಲು ಕಾರಣವೇನು?" ಎಂದು ಪ್ರಶ್ನಿಸಿದರು.












Click it and Unblock the Notifications