ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು, ಫೆ.24 : ಉಸಿರಾಟದ ತೊಂದರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ಸಾಲುಮರದ ತಿಮ್ಮಕ್ಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆರೋಗ್ಯ ಸಚಿವ ಯುಟಿ ಖಾದರ್, ವಿಧಾನಪರಿಷತ್ ಸದಸ್ಯೆ ತಾರಾ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿದ್ದಾರೆ.
ಉಸಿರಾಟದ ತೊಂದರೆ, ಮಂಡಿನೋವು ಮತ್ತು ತೀವ್ರ ಆಯಾಸದಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ (102) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿಟ್ಟು ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ತಿಮ್ಮಕ್ಕ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಚೇತರಿಕೆ ಕಾಣುತ್ತಿದ್ದಾರೆ ಎಂದು ಡಾ.ಅಶೋಕ್ ಸೋಮವಾರ ತಿಳಿಸಿದ್ದಾರೆ.

ಮಾಗಡಿ ಸಮೀಪದ ಹುಲಿಕಲ್ ಗ್ರಾಮದವರಾದ ತಿಮ್ಮಕ್ಕ ಕಳೆದ ವಾರ ಗಿಡ ನೆಡುವ ಮೂಲಕ ತಮ್ಮ 102ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಭಾನುವಾರ ಅವರಿಗೆ ಉಸಿರಾಟದ ತೊಂದರೆ ಮತ್ತು ಮಂಡಿನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಅಗತ್ಯ ಸಹಾಯ : ಸಾಲುಮರದ ತಿಮ್ಮಕ್ಕ ಅವರು ರಾಷ್ಟ್ರದ ಆಸ್ತಿ. ಅವರ ಚಿಕಿತ್ಸೆಗೆ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ತಿಮ್ಮಕ್ಕ ಅವರಿಗೆ ವೃದ್ಧಾಪ್ಯ ವೇತನ 400 ಸಿಗುತ್ತಿದ್ದು, ಅದನ್ನು ಹೊರತುಪಡಿಸಿ ಸರ್ಕಾರದಿಂದ ಬೇರೆ ಯಾವ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಿ, ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ಸಚಿವರು ಭರವಸೆ ನೀಡಿದರು.












Click it and Unblock the Notifications