ಸಿದ್ದರಾಮಯ್ಯ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಸದಾನಂದಗೌಡ
ಬೆಂಗಳೂರು, ಮೇ 1: ಸೋಲಿನ ಭೀತಿಯಲ್ಲಿರುವ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಬಿಜೆಪಿ ವಿರುದ್ಧ ನಕಾರಾತ್ಮಕ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಟೀಕಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರು ಸಾಧನೆಯ ಹೆಸರಿನಲ್ಲಿ ಮತ ಕೇಳಲಾಗದೆ, ಅಪಪ್ರಚಾರ ನಡೆಸಿ ಮತದಾರರಲ್ಲಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಸುಳಿವು ಅರಿತ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲೂ ಅದೇ ಸ್ಥಿತಿ ಎದುರಾಗಿದೆ ಎಂದರು.
ಪ್ರಬಲ ಅಭ್ಯರ್ಥಿಯನ್ನು ಬಿಜೆಪಿ ನಿಲ್ಲಿಸಿರುವುದರಿಂದ ಸಿದ್ದರಾಮಯ್ಯ ಅವರಿಗೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಮುಖ್ಯಮಂತ್ರಿ ತಾನೇ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ನ ಬೇರಾವುದೇ ನಾಯಕರು ಭವಿಷ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿಲ್ಲ. ಅಷ್ಟೇ ಅಲ್ಲದೆ, ಸಿದ್ದರಾಮಯ್ಯ ಬಗ್ಗೆ ಸಕಾರಾತ್ಮಕವಾಗಿಯೂ ಮಾತನಾಡುತ್ತಿಲ್ಲ ಎಂದು ಹೇಳಿದರು.

ಉಡಾಫೆ-ಬಡಾಯಿ ಪ್ರಚಾರಕ್ಕೆ ಸಿದ್ದರಾಮಯ್ಯ ಕ್ಯಾಪ್ಟನ್: ಕರಾವಳಿಯಲ್ಲಿ ಸಾಮರಸ್ಯದ ನಡಿಗೆ, ಬಳ್ಳಾರಿ ಪಾದಯಾತ್ರೆ ಹೀಗೆ ಅನೇಕ ಯಾತ್ರೆಗಳನ್ನು ನಡೆಸಿದ ಕಾಂಗ್ರೆಸ್, 5 ವರ್ಷಗಳಲ್ಲಿ ನಡಿಗೆಗಳ ಉದ್ದೇಶವನ್ನು ಈಡೇರಿಸಿಲ್ಲ.
ಈ ಭಾಗಗಳ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ. ಕಾಂಗ್ರೆಸ್ ಅಭಿವೃದ್ಧಿಯ ಹೆಸರಿನಲ್ಲಿ ಮತಕೇಳಲಾಗದೆ ಉಡಾಫೆ, ಬಂಡಾಯ ಪ್ರಚಾರದಲ್ಲಿ ತೊಗಡಿದೆ. ಇದಕ್ಕೆ ಸಿದ್ದರಾಮಯ್ಯ ಅವರು ಕ್ಯಾಪ್ಟನ್ ಆಗಿ ಕೆಲಸ ಮಾಡುತ್ತಿದ್ದಾರೆ.
ಜೆಡಿಎಸ್ ನ ಎಚ್ಡಿ ಕುಮಾರಸ್ವಾಮಿಯವರೊಂದಿಗೆ ಬಿಜೆಪಿ ಒಪ್ಪಂದ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಬಿಬಿಎಂಪಿಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸುತ್ತಿರುವ ಕಾಂಗ್ರೆಸ್ ಗೆ ಪ್ರಶ್ನೆ ಮಾಡುವ ಹಕ್ಕಿಲ್ಲ ಎಂದರು.
ಕನ್ನಡದ ಬಗ್ಗೆ ನಿಜವಾದ ಕಾಳಜಿಬಿಜೆಪಿಗಿದೆ. ಕನ್ನಡ ಧ್ವಜ ವಿಷಯ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಮೆಟ್ರೋ ರೈಲಿನಲ್ಲಿ ಕನ್ನಡಕ್ಕೆ ಆಧ್ಯತೆ ಸೇರಿದಂತೆ ಅನೇಕ ಸಂದರ್ಭದಲ್ಲಿ ಬಿಜೆಪಿ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಹೇಳಿದರು.












Click it and Unblock the Notifications