'ಉಪ ಮುಖ್ಯಮಂತ್ರಿ' ಆದಷ್ಟು ಬೇಗ 'ಮುಖ್ಯಮಂತ್ರಿ' ಆಗಲಿದ್ದಾರೆ: ಡಿ.ವಿ. ಸದಾನಂದಗೌಡ
ಬೆಂಗಳೂರು, ಮಾ. 11: ಅತ್ಯುತ್ತಮ ಕರ್ತವ್ಯ ಪ್ರಜ್ಞೆ ಹಾಗೂ ಸದ್ದಿಲ್ಲದೆ ತಮ್ಮ ಪಾಡಿಗೆ ತಾವು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿರುವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ಪದವಿ ಮುಂದಿರುವ ʼಉಪʼ ಹೋಗಿ ಆದಷ್ಟು ಬೇಗ ʼಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ. ಅದಕ್ಕೆ ಬೇಕಾದ ಎಲ್ಲ ಕೃಪೆ-ಚೈತನ್ಯವನ್ನು ಆ ಪರಮಶಿವ ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಹಾರೈಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ರಾತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಫೌಂಡೇಷನ್ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಸದಾನಂದಗೌಡ ಅವರು ಮಾತನಾಡಿದರು.
ಡಾ. ಅಶ್ವಥ್ವ ನಾರಾಯಣ ಅವರು ಕೇವಲ ಮಾತನಾಡುತ್ತಲೇ ಕೆಲಸ ಮಾಡುವ ವ್ಯಕ್ತಿಯಲ್ಲ. ಅಬ್ಬರ ಇಲ್ಲ, ಆಡಂಬರ ಇಲ್ಲದ ವ್ಯಕ್ತಿ. ಅವರು ಮಾಡುತ್ತಿರುವ ಉತ್ತಮ ಕೆಲಸಗಳೇ ಅವರ ಬಗ್ಗೆ ಮಾತನಾಡುತ್ತಿವೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಬಿಡುವಿಲ್ಲದ ಕೆಲಸಗಳಲ್ಲಿ ತೊಡಗಿಬಿಡುತ್ತಾರೆಂದು ಸದಾನಂದಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ನಡುವಿನ ರಾಜಕಾರಣಿಗಳಲ್ಲಿ ಮಾತನಾಡುವವರೇ ಜಾಸ್ತಿ. ಇದಕ್ಕೆ ಅಶ್ವಥ್ ನಾರಾಯಣ ಅಪವಾದ. ಅವರದ್ದು ಮಾತು ಕನಿಷ್ಠ, ಕೆಲಸ ಗರಿಷ್ಠ ಎನ್ನುವ ನೀತಿ. ಈ ಪರಿಶ್ರಮವೇ ಅವರನ್ನು ಮುಂದೊಂದು ದಿನ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದು ಡಿವಿಎಸ್ ಅಭಿಪ್ರಾಯಪಟ್ಟರು.
ಮಲ್ಲೇಶ್ವರ ಕ್ಷೇತ್ರದಲ್ಲಿ ಅದೆಷ್ಟೋ ಮಹಾನುಭಾವರು ಇದ್ದಾರೆ. ಕವಿಗಳು, ವಿಜ್ಞಾನಿಗಳು, ಪಂಡಿತರು, ಪದ್ಮಗಳು- ಭಾರತ ರತ್ನಗಳು ಇದ್ದಾರೆ. ಮುಂದಿನ ದಿನಗಳಲ್ಲಿ ಇದೇ ಕ್ಷೇತ್ರದಿಂದ ಒಬ್ಬ ಮುಖ್ಯಮಂತ್ರಿಯೂ ಹೊರಹೊಮ್ಮಲಿ ಎಂದು ಸದಾನಂದ ಗೌಡರು ಇದೇ ಸಂದರ್ಭದಲ್ಲಿ ಹೇಳಿದರು.
Recommended Video
ಮಲ್ಲೇಶ್ವರದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಸಾಂಸ್ಕೃತಿಕ ಜಾಗರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಭಾಗವಹಿಸಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ವೆಂಕಟೇಶ್, ನಿವೃತ್ತ ಪೋಲೀಸ್ ಅಧಿಕಾರಿ ಬಿ.ಕೆ. ಶಿವರಾಮ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.