ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಸಚಿವರ ಮನೆಗಳಿಗೆ ಮುತ್ತಿಗೆ
ಬೆಂಗಳೂರು, ಜನವರಿ 27: ದಲಿತ ಪಂಗಡಗಳಿಗೆ ಒಳ ಮೀಸಲಾತಿ ನೀಡುವಂತೆ ಶಿಫಾರಸ್ಸು ಮಾಡಿರುವ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದ ಎಲ್ಲ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲು ಕರ್ನಾಟಕ ಮೀಸಲಾತಿ ಸಂರಕ್ಷಣಾ ವೇದಿಕೆ ನಿರ್ದರಿಸಿದೆ.
ರಾಜ್ಯ ಸರ್ಕಾರವು ಈ ವರದಿಯ ಬಗ್ಗೆ ಸಾರ್ವಜನಿಕರ ಚರ್ಚೆಗೆ ಅವಕಾಶ ಕಲ್ಪಿಸಿದೆ. ಕೇಂದ್ರ ಸರ್ಕಾರಕ್ಕೆ ತರಾತುರಿಯಲ್ಲಿ ಶಿಫಾರಸು ಮಾಡಲು ಮುಂದಾಗಿದೆ. ಈ ಬಗ್ಗೆ ಎಲ್ಲ ಸಚಿವರು ಸಂಪುಟ ಸಭೆಯಲ್ಲಿ ಧ್ವನಿ ಎತ್ತಬೇಕು, ದಲಿತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ಜನವರಿ 29 ರಂದು ಸಚಿವರ ಮನೆಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯಾಧ್ಯಕ್ಷ ರಾಘವೇಂದ್ರನಾಯಕ್ ಎಚ್ಚರಿಸಿದರು.
ಆಯೋಗವು ಪರಿಶಿಷ್ಟ ಜಾತಿಯಲ್ಲಿನ ಒಂದು ಉಪಜಾತಿಯ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇದರ ಬಗ್ಗೆ ಸಾರ್ವಜನಿಕವಾಗಿ ಈವರೆಗೆ ಚರ್ಚೆ ನಡೆದಿಲ್ಲ. ರಾಜಕೀಯ ಹಿತಾಸಕ್ತಿಗಳ ಪ್ರಚೋದನೆಯಿಂದಾಗಿ ದಲಿತ ಸಮುದಾಯದ ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಕೊರಚ, ಕೊರಮ, ದೊಂಬಿದಾಸ, ಬುಡಗ ಜಂಗಮ, ಸಿಳ್ಳೆಕ್ಯಾತ ಹಾಗೂ ಅಲೆಮಾರಿ ಸಮುದಾಯಗಳ ನಡುವೆ ವಿಷಬೀಜ ಬಿತ್ತಲಾಗುತ್ತಿದೆ ಎಂದರು.

ಸದಾಶಿವ ಆಯೋಗದ ವರದಿಯ ಬಗ್ಗೆ ಸಾರ್ವಜನಿಕರು ಹಾಗೂ ತಜ್ಞರ ಚರ್ಚೆಗೆ ಅವಕಾಶ ಕಲ್ಪಿಸಿ, ಅವರಿಂದ ಅಹವಾಲು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಬೇಕು. ವರದಿಯ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿಯ ಮಿತಿಯನ್ನು ಶೇ 50ರಿಂದ 75ಕ್ಕೆ ಏರಿಸಬೇಕು ಎಂದು ಒಕ್ಕೂಟದ ಉಪಾಧ್ಯಕ್ಷ ಜಿ.ಮಾದೇಶ್ ಒತ್ತಾಯಿಸಿದರು.












Click it and Unblock the Notifications