ಬೆಂಗಳೂರು : ಕ್ಯಾಬ್ಗಳಲ್ಲಿ ಮಹಿಳೆಯರು ಸುರಕ್ಷಿತವೇ?
ಬೆಂಗಳೂರು, ಡಿ.9 : ದೆಹಲಿಯಲ್ಲಿ ಕ್ಯಾಬ್ ಡ್ರೈವರ್ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಬಿಸಿ ಬೆಂಗಳೂರಿಗೂ ತಟ್ಟಿದೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಚರ್ಚಿಸಲು ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಸಭೆ ಕರೆಯಲು ಸಾರಿಗೆ ಆಯುಕ್ತರು ನಿರ್ಧರಿಸಿದ್ದಾರೆ.
ಸಾರಿಗೆ ಆಯುಕ್ತ ಡಾ.ರಾಮೇಗೌಡ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಾಲ್ಕು ದಿನಗಳಲ್ಲಿ ಬೆಂಗಳೂರು ನಗರದಲ್ಲಿರುವ ಮೆರು, ಒಲಾ, ಟ್ಯಾಕ್ಸಿ ಫಾರ್ ಶ್ಯೂರ್ ಮುಂತಾದ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ. [ಅತ್ಯಾಚಾರಿ ಟ್ಯಾಕ್ಸಿ ಚಾಲಕ ಬಂಧನ]

ಸಭೆಯಲ್ಲಿ ಟ್ಯಾಕ್ಸಿಯಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಚಾಲಕರ ನೇಮಕಾತಿ ಸಂದರ್ಭದಲ್ಲಿ ಅನುಸರಿಸುತ್ತಿರುವ ನಿಯಮ ಮುಂತಾದ ವಿಚಾರಗಳ ಬಗ್ಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ. [ಬೆಂಗಳೂರಿನ ಜನತೆಗೆ ವರವಾಗಿ ಬಂದಿದೆ ನ್ಯಾನೋ ಟ್ಯಾಕ್ಸಿ]
ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಡೆದ ಕಾಲ್ಸೆಂಟರ್ ಉದ್ಯೋಗಿ ಪ್ರತಿಭಾ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳ ಸುರಕ್ಷತೆಗೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಮಾಲೀಕರು ಮತ್ತು ಚಾಲಕರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದರು.
ಟ್ಯಾಕ್ಸಿಗಳ ನೋಂದಣಿಗೆ ಸಂಬಂಧಿಸಿದಂತೆ ಮಾಲೀಕರಿಂದ ವಿವರಗಳನ್ನು ಸಂಗ್ರಹಿಸಲಾಗುತ್ತದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಮೇಗೌಡ ಅವರು ಎಚ್ಚರಿಕೆ ನೀಡಿದರು.
ದೆಹಲಿಯಲ್ಲಿ ಏನಾಗಿತ್ತು : ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ತಲೆ ಮರೆಸಿಕೊಂಡಿದ್ದ ಟ್ಯಾಕ್ಸಿ ಚಾಲಕನನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದರು. ಶುಕ್ರವಾರ ರಾತ್ರಿ ಗುರ್ಗಾಂವ್ ನಲ್ಲಿ ಪಾರ್ಟಿ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆ ಮೇಲೆ ಕ್ಯಾಬ್ ನಲ್ಲೇ ಟ್ಯಾಕ್ಸಿ ಚಾಲಕ ಅತ್ಯಾಚಾರ ನಡೆಸಿದ್ದ.












Click it and Unblock the Notifications