ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮ ಕಡ್ಡಾಯ: ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು, ಮೇ 22: ''ಮಹಾಮಾರಿ ಕೊರೊನಾ ವೈರಸ್ ಸೋಂಕು ಹೆಚ್ಚು ಹರಡದಂತೆ ತಡೆಯಲು ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು'' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
Recommended Video
ಕೊರೊನಾ ವೈರಸ್ ತಡೆಗಟ್ಟಲು ಘೋಷಣೆಯಾದ ಲಾಕ್ ಡೌನ್ ಬಳಿಕ ಪ್ರಾರಂಭವಾಗಿರುವ ಕೈಗಾರಿಕೆಗಳಲ್ಲಿ ಆಳವಡಿಸಿಕೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಬಿಡದಿ ಬಳಿಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ್ದರು.
ಇದೇ ವೇಳೆ ಬಿಡದಿ ಸಮೀಪದ ಟಯೋಟ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಗೂ ಭೇಟಿ ನೀಡಿ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಕಾರ್ಖಾನೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

''ಕೋವಿಡ್-19 ಮಧ್ಯೆ ಕೈಗಾರಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ಕೈಗಾರಿಕೆಗಳ ಪ್ರದೇಶಗಳಲ್ಲಿ ಕಾರ್ಮಿಕರ ಆರೋಗ್ಯವನ್ನು ಕಾಪಾಡಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಬಹುದಾಗಿದೆ'' ಎಂದು ಜಗದೀಶ್ ಶೆಟ್ಟರ್ ಹೇಳಿದರು.
''ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಕೈಗಾರಿಕೆಗಳು ಕಾರ್ಯನಿರ್ವಹಿಸಬಹುದಾಗಿದೆ. ರಾಜ್ಯ ಸರಕಾರದ ವತಿಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಸಹಾಯವನ್ನು ಒದಗಿಸಲು ನಮ್ಮ ಇಲಾಖೆ ಸಿದ್ದವಾಗಿದೆ'' ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಕೆಐಎಡಿಬಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಸವರಾಜೇಂದ್ರ, ಮಂತ್ರಿಗಳ ಆಪ್ತ ಕಾರ್ಯದರ್ಶಿ ಧವಳೇಶ್ವರ್ ಉಪಸ್ಥಿತರಿದ್ದರು.












Click it and Unblock the Notifications