ಪ್ರತಿ ಕೊರೊನಾ ಸೋಂಕಿತರ ಮಾದರಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡುತ್ತದೆ
ಬೆಂಗಳೂರು, ಜೂನ್ 23: ಕೊರೊನಾ ಸೋಂಕಿತರ ಪ್ರತಿ ಮಾದರಿಯು 'ಜಿನೋಮ್ ಸೀಕ್ವೆನ್ಸಿಂಗ್'ಗೆ ಒಳಪಡುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
ಕೊರೊನಾ ವೈರಸ್ನ ಬೇರೆ ಬೇರೆ ರೂಪಾಂತರಿ ತಳಿಗಳು ಪತ್ತೆಯಾಗುತ್ತಿರುವುದು ಬಿಬಿಎಂಪಿಯ ಚಿಂತೆಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕೊರೊನಾ ಸೋಂಕಿತರ ಗಂಟಲದ ದ್ರವದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸೋಂಕು ದೃಢಪಡುವ ಗಂಟಲು ದ್ರವಗಳ ಮಾದರಿಗಳಲ್ಲಿ ಶೇ 5ರಷ್ಟನ್ನು ಈ ಪ್ರಕ್ರಿಯೆಗೆ ಒಳಪಡಿಸಲಿದ್ದೇವೆಂದು ಹೇಳಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚು ಕಂಡುಬರುತ್ತಿತ್ತು,ಈ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ, ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ತಿಳಿಸಲಾಗಿದೆ.
ಭಾರತದಲ್ಲಿ ಒಟ್ಟು 40 'ಡೆಲ್ಟಾ ಪ್ಲಸ್' ರೂಪಾಂತರಿ ಪತ್ತೆ, ಯಾವ ರಾಜ್ಯದಲ್ಲಿ ಎಷ್ಟು?
ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ 6, ಕೇರಳದಲ್ಲಿ 3 ಪ್ರಕರಣಗಳು, ತಮಿಳುನಾಡಿನಲ್ಲಿ ಮೂರು ಪ್ರಕರಣಗಳು, ಕರ್ನಾಟಕದಲ್ಲಿ 2 ಪ್ರಕರಣಗಳು, ಪಂಜಾಬ್, ಆಂಧ್ರಪ್ರದೇಶ ಹಾಗೂ ಜಮ್ಮುವಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಡೆಲ್ಟಾ ಪ್ಲಸ್ ಪ್ರಕರಣಗಳು ಮಹಾರಾಷ್ಟ್ರದ ರತ್ನಗಿರಿ, ಜಲಗಾಂವ್, ಕೇರಳದ ಪಾಲಕ್ಕಾಡ್, ಪಟ್ಟಣಂತಿಟ್ಟ, ಮಧ್ಯಪ್ರದೇಶದ ಭೋಪಾಲ್ ಮತ್ತು ಶಿವಪುರಿಯಲ್ಲಿ ಪತ್ತೆಯಾಗಿದೆ. ದೇಶದ ಮೂರು ರಾಜ್ಯಗಳಲ್ಲಿ ಇದುವರೆಗೆ ಪತ್ತೆಯಾದ ಕೊರೊನಾವೈರಸ್ ಡೆಲ್ಟಾ ಪ್ಲಸ್ ರೂಪಾಂತರವನ್ನು ಕೇಂದ್ರ ಆರೋಗ್ಯ ಸಚಿವಾಲಯವು ಕಾಳಜಿಯ ರೂಪಾಂತರವೆಂದು ವರ್ಗೀಕರಿಸಿದೆ. ರೂಪಾಂತರ ಪತ್ತೆಯಾದ ಕ್ಲಸ್ಟರ್ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯಗಳಿಗೆ ನಿರ್ದೇಶಿಸಲಾಗಿದೆ.
Recommended Video
ಕೊರೊನಾ ರೂಪಾಂತರಿಗೆ ಚಿಕಿತ್ಸೆ
ಕೊರೊನಾ ವೈರಸ್ ಹಲವು ವಿಧದಲ್ಲಿ ರೂಪಾಂತರಗೊಳ್ಳುತ್ತಿದ್ದು, ಅದಕ್ಕೆ ತಕ್ಕ ಚಿಕಿತ್ಸೆ ನೀಡುವ ಅಗತ್ಯವಿದೆ. ಡೆಲ್ಟಾ ವೈರಸನ್ನು ಭಾರತದಲ್ಲಿ ಪತ್ತೆ ಹಚ್ಚಲಾಗಿದ್ದು, ಈಗ ಹಲವು ದೇಶಗಳಲ್ಲಿ ಈ ವೈರಸ್ ಕಂಡು ಬಂದಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಬಂದಿದೆ ಎಂಬುದನ್ನು ಮಾಧ್ಯಮಗಳಲ್ಲಿ ತಿಳಿದುಕೊಂಡಿದ್ದೇನೆ.
ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಕೊರೊನಾ ವೈರಾಣುವಿನ ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ತಳಿಗಳು ಪತ್ತೆಯಾಗುತ್ತಿರುವುದರಿಂದ ಬಿಬಿಎಂಪಿಯೂ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಳನ್ನು ನಡೆಸಲಿದೆ.
ಕೋವಿಡ್ ನೆಗೆಟಿವ್ ವರದಿ
ಹೊರ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರಿಕ್ಷಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲು ಆರೋಗ್ಯ ತಜ್ಞರು ಸೂಚಿಸಿದರೆ, ಬಿಬಿಎಂಪಿ ಜಾರಿಗೆ ತರಲು ಬದ್ಧವಾಗಿದೆ. ಇನ್ನು ನಿತ್ಯ ಪಾಸಿಟಿವ್ ಪ್ರಕರಣಗಳನ್ನು ನಾವು ವಿಶೇಷವಾಗಿ ಗಮನಿಸುತ್ತಿದ್ದೇವೆ. ರೂಪಾಂತರ ವೈರಸ್ನಿಂದ ಸಮಸ್ಯೆಯಾಗದಂತೆ ಕ್ರಮವಹಿಸಿದ್ದು, ಅಗತ್ಯಬಿದ್ದರೆ, ಆರ್ಟಿಪಿಸಿಆರ್ ಕಡ್ಡಾಗೊಳಿಸಲಾಗುವುದು ಎಂದಿದ್ದಾರೆ.
ಬಿಬಿಎಂಪಿಯಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಉತ್ಸವಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇನ್ನು, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಒಟ್ಟು 68 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ, 1,68,958 ಮಂದಿಗೆ ಲಸಿಕೆ ನೀಡುವ ಮೂಲಕ ಅಭಿಯಾನ ಯಶಸ್ವಿಯಾಗಿದೆ ಎಂದು ಹೇಳಿದರು.ಎರಡು ರೂಪಾಂತರಿ ನಡುವಿನ ವ್ಯತ್ಯಾಸ
ಡೆಲ್ಟಾ ಪ್ಲಸ್ ಮತ್ತು ಡೆಲ್ಟಾ ವೈರಸ್ ನಡುವೆ ಏನು ವ್ಯತ್ಯಾಸವಿದೆ, ಯಾವ ರೀತಿ ರೂಪಾಂತರಗೊಳ್ಳುತ್ತಿದೆ, ಚಿಕಿತ್ಸೆ ಹೇಗೆ ಎಂಬುದರ ಬಗ್ಗೆ ತಜ್ಞರ ಮೂಲಕ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ. ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆರೋಗ್ಯ ತಜ್ಞರ ಸಬೆ ನಡೆಯಲಿದ್ದು, ಅಲ್ಲಿ ಡೆಲ್ಟಾ-ಪ್ಲಸ್ ಹಾಗೂ ಮೂರನೇ ಅಲೆಯಲ್ಲಿ ಮಕ್ಕಳ ಮೇಲಿನ ಪರಿಣಾಮ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.