ಸೆ.26ರಂದು 'ವಿಧಾನಸೌಧ ಚಲೋ' ನಡೆಸಲಿರುವ ಸಂಯುಕ್ತ ಕಿಸಾನ್ ಮೋರ್ಚಾ
ಬೆಂಗಳೂರು, ಸೆ. 25: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ), ರಾಜ್ಯ ರೈತ ಸಂಘಟನೆಗಳ ಒಕ್ಕೂಟ ವತಿಯಿಂದ ನಡೆಯರಲಿರುವ ಬೆಂಗಳೂರು ವಿಧಾನ ಸೌಧ ಚಲೋ ಹಿನ್ನೆಲೆ ಭಾನುವಾರ ರಾಷ್ಟ್ರೀಯ ದುಂಡು ಮೇಜಿನ ಅಧಿವೇಶನ ಬೆಂಗಳೂರಿನಲ್ಲಿ ನಡೆದಿದೆ.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ವಿವಿಧ ರಾಜ್ಯದ ರೈತ ಮುಖಂಡರು ಭಾಗವಹಿಸಿದ್ದರು.
ರೈತರಿಗೆ ಖುಷಿ ಸುದ್ದಿ: ನಿಮ್ಮ ಆಸ್ತಿ-ಪಾಸ್ತಿ ಜಪ್ತಿ ಮಾಡುವುದಿಲ್ಲ ಬ್ಯಾಂಕ್ ಮಂದಿ!
ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಬೆಳಗ್ಗೆ 11 ಗಂಟೆಯಿಂದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ವಿಧಾನಸೌಧವರೆಗೂ 'ವಿಧಾನಸೌಧ ಚಲೋ' ಬೃಹತ್ ರ್ಯಾಲಿ ನಡೆಯಲಿದೆ. ಈ ಕುರಿತು ಇಂದು ರೈತ ಮುಖಂಡರ ರಾಷ್ಟ್ರೀಯ ದುಂಡು ಮೇಜಿನ ಅಧಿವೇಶನ ನಡೆದಿದೆ. ಸೋಮವಾರ ನಡೆಯಲಿರುವ ರ್ಯಾಲಿಯಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ರೈತರು ಭಾಗಿಯಾಗುವ ನಿರೀಕ್ಷೆಯಿದೆ.
ಇಂದಿನ ಸಭೆಯಲ್ಲಿ ರೈತರಿಗೆ ಸುಳ್ಳು ಭರವಸೆ ನೀಡಿ ನಾಟಕವಾಡುತ್ತಿರುವ ಸರ್ಕಾರದ ವಿರುದ್ಧ ರೈತ ಚಳವಳಿಯನ್ನು ಮತ್ತಷ್ಟು ತೀವರಗೊಳಿಸಲು ತೀರ್ಮಾನಿಸಲಾಗಿದೆ.
"ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ಗ್ಯಾರೆಂಟಿ ಕಾನೂನು ಜಾರಿ ಮಾಡುತ್ತೇವ ಕನಿಷ್ಠ ಬೆಂಬಲ ಬೆಲೆ ಕಾತರಿ ನೀಡಲು ಸಮಿತಿ ರಚಿಸಿದ್ದೇವೆ ಎಂದು ಸರ್ಕಾರದ ಕೃಪಾಪೋಷಿತ ಸಮಿತಿ ರಚಿಸಿ, ವರ್ಷಗಳ ಕಾಲ ಹೋರಾಟ ಮಾಡಿದ, ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿ ನಾಟಕವಾಡುತ್ತಿದ್ದಾರೆ' ಎಂದು ಆರೋಪಿಸಿ, ಈ ಸಮಿತಿಯ ನಿರ್ಧಾರಗಳನ್ನು ತಿರಸ್ಕರಿಸಲು ತೀರ್ಮಾನಿಸಲಾಗಿದೆ. ಜೊತೆಗೆ ದೇಶಾದ್ಯಂತ ರೈತ ಚಳವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ನಿರ್ಧಾರ ಮಾಡಲಾಗಿದೆ.
ರೈತರ ಬೇಡಿಕೆಗಳು ಇಂತಿವೆ.
1. ಎಲ್ಲಾ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ MSP ಖಾತರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು.
2. 2022ರ ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು.
3. ಕಬ್ಬಿನ ಎಫ್ ಆರ್ ಪಿ ದರ ಪುನರ್ ಪರಿಶೀಲನೆ ನಡೆಸಿ, ವೈಜ್ಞಾನಿಕವಾಗಿ ನ್ಯಾಯಯುತ ಕಬ್ಬಿನ ದರ ನಿಗದಿ ಮಾಡಬೇಕು.
4. ಕೃಷಿ ಉತ್ಪನ್ನಗಳ, ಹಾಗೂ ಉಪಕರಣಗಳ ಮೇಲಿನ ಜಿಎಸ್ಟಿ ರದ್ದುಪಡಿಸಬೇಕು.
5. ರೈತರ ಸಾಲ ಮನ್ನಾ ಮಾಡಬೇಕು.
6. ಫಸಲ್ ಭೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸಬೇಕು.
7. ವಿಶ್ವವ್ಯಾಪಾರ ಒಪ್ಪಂದ ಡಬ್ಲ್ಯುಟಿಒನಿಂದ ಭಾರತ ಸರ್ಕಾರ ಹೊರಬರಬೇಕು.
8. ದೆಹಲಿ ಹೋರಾಟದಲ್ಲಿ ಮಾಡಿದ 750 ರೈತ ಕುಟುಂಬಗಳಿಗ ಭರವಸೆಯಂತೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಭರವಸೆ ಈಡೇರಿಸಬೇಕು.
9. ದೆಹಲಿ ಹೋರಾಟದಲ್ಲಿ ರೈತರ ಮೇಲೆ ದಾಖಲಾಗಿರುವ ಪೋಲಿಸ್ ಪ್ರಕರಣಗಳನ್ನು ವಾಪಸ್ ಪಡೆಯಬೇಕು.
10. ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು.
ಈ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಂಡು ದೇಶಾದ್ಯಂತ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್, ತಮಿಳುನಾಡು, ಕೇರಳ, ಉತ್ತರ ಪ್ರದೇಶ, ಹರಿಯಾಣ, ಒರಿಸ್ಸಾ, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದರು. ಸೋಮವಾರ ನಡೆಯಲಿರುವ ರ್ಯಾಲಿಯಲ್ಲಿ ವಿವಿಧ ರಾಜ್ಯಗಳ ನೂರಕ್ಕೂ ಹೆಚ್ಚು ರೈತ ಮುಖಂಡರು ಭಾಗವಹಿಸಲಿದ್ದಾರೆ.