ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಶೀಘ್ರ ಆರಂಭ: ಸಿಎಂ
ಬೆಂಗಳೂರು, ಜನವರಿ 26 : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೈನಿಕ ಶಾಲೆಯೊಂದನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ರಾಯಣ್ಣನವರ 187 ನೇ ಸ್ಮರಣೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಗರದ ಖೋಡೆ ವೃತ್ತದಲ್ಲಿರುವ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿಯವರು ಮಾತನಾಡಿದರು.
ಸರ್ಕಾರ ಈಗಾಗಲೇ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ರಾಯಣ್ಣ ಅವರ ಹುಟ್ಟೂರು, ಸಮಾಧಿ ಸ್ಥಳದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ವಿವಿಧ ಕಾಮಗಾರಿಗಳಿಗೆ 257 ಕೋಟಿ ರೂ. ನಿಗಧಿ ಮಾಡಿ ಟೆಂಡರ್ ಸಹ ಕರೆಯಲಾಗಿದೆ ಎಂದು ಹೇಳಿದರು.
ಪ್ರಾಧಿಕಾರ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕಿತ್ತೂರು ರಾಣಿ ಚೆನ್ನಮ್ಮ ಅವರ ಅರಮನೆಯನ್ನು ಪುನರುಜ್ಜೀವನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದರೆ, ಸ್ವಾಮಿ ನಿಷ್ಟೆ, ಸ್ವಾಭಿಮಾನ ಮತ್ತು ದೇಶಭಕ್ತಿಗೆ ಮತ್ತೊಂದು ಹೆಸರಾಗಿದೆ. ಅವರಿಂದ ಸ್ಪೂರ್ತಿ ಪಡೆದು ನಾಡು, ನುಡಿ, ನೆಲ, ಜಲ, ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಹೋರಾಟ ಮಾಡಬೇಕು. ಯುವ ಪೀಳಿಗೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ತ್ಯಾಗ, ಬಲಿದಾನ ಕುರಿತು ತಿಳಿವಳಿಕೆ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.
ಮಾನ್ಯ ಮುಖ್ಯಮಂತ್ರಿ @siddaramaiah ಅವರು ಮಾನ್ಯ ರಾಜ್ಯಪಾಲರೊಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದರು. pic.twitter.com/IHSLstx8Yi
— CM of Karnataka (@CMofKarnataka) January 26, 2018
ಬ್ರಿಟಿಷರ ಹಿಡಿತದಲ್ಲಿದ್ದ ಕಿತ್ತೂರು ಸಂಸ್ಥಾನಕ್ಕೆ ಸ್ವಾತಂತ್ರ್ಯ ತಂದು ಕೊಡಬೇಕೆಂದು ರಾಣಿ ಚೆನ್ನಮ್ಮ ಜತೆ ಸೇರಿ ರಾಯಣ್ಣ ಹೋರಾಟ ಮಾಡಿದ್ದರು. ಚೆನ್ನಮ್ಮ ಅವರಿಗೆ ನಿಷ್ಠಾವಂತ ಹಾಗೂ ನಂಬಿಕೆಯ ಬಂಟರಾಗಿದ್ದರು ಎಂದು ಮುಖ್ಯಮಂತ್ರಿಯವರು ಹೇಳಿದರು.