ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಡಿಜಿಪಿ ಬದುಕಿದ್ದರೆ ಕಠಿಣ ಕ್ರಮ ಕೈಗೊಳ್ಳಲಿ; ಡಿ.ಕೆ. ಶಿವಕುಮಾರ್
ಬೆಂಗಳೂರು, ಏಪ್ರಿಲ್ 12: ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರೇ ಕಾರಣ ಎಂದು ವಾಟ್ಸಪ್ ಮೂಲಕ ಮೆಸೇಜ್ ಕಳಿಸಿ ಬೆಳಗವಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್ ಆರೋಪಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, "ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆಯಾಗಬೇಕು. ಮೊದಲು ಡೆತ್ ನೋಟ್ ಸಂಬಂಧ ಎಫ್ಐಆರ್ ದಾಖಲಾಗಬೇಕು. ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವರು ಏನೂ ಮಾಡಲ್ಲ ಅಂತ ಗೊತ್ತು. ಡಿಜಿಪಿ ರಾಜ್ಯದಲ್ಲಿ ಬದುಕಿದ್ದರೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ," ಎಂದು ಡಿ.ಕೆ. ಶಿವಕುಮಾರ್ ಸವಾಲೆಸೆದಿದ್ದಾರೆ.
ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್ನಲ್ಲಿ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರತಿಕ್ರಿಯೆ
ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಸಂಪೂರ್ಣವಾಗಿ ಆವರಿಸಿದೆ. ಬಿಜೆಪಿ ಸರ್ಕಾರದ ಅಡಿಯಿಂದ ಮುಡಿವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಸರ್ಕಾರದ ಎಲ್ಲ ವಿಭಾಗಗಳಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬರುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರತಿಕ್ರಿಯಿಸಿದ್ದಾರೆ.
40% ಕಮಿಷನ್ ಆರೋಪ ಕೇವಲ ಒಬ್ಬ ಸಚಿವರ ವಿರುದ್ಧ ಕೇಳಿ ಬಂದಿಲ್ಲ. ಇಡೀ ರಾಜ್ಯ ಸರ್ಕಾರದ ವಿರುದ್ಧವೇ ಕೇಳಿ ಬಂದಿರುವ ಆರೋಪ. ಅಧಿಕಾರದಲ್ಲಿ ಕೂತು ರಾಜ್ಯವನ್ನು ಲೂಟಿ ಮಾಡುತ್ತಿರುವ ಬಿಜೆಪಿ ಸರ್ಕಾರ ತನ್ನ ಕಾರ್ಯಕರ್ತನನ್ನು ಬಿಡದಿರುವ ಮಟ್ಟಿಗೆ ಭ್ರಷ್ಟಾಚಾರ ಮಾಡುತ್ತಿದೆ. ಸಂತೋಷ್ ಪಾಟೀಲ್ ಅವರ ಆರೋಪ ಇದಕ್ಕೆ ಸಾಕ್ಷಿ. ಅವರು ಅಧಿಕೃತ ಪತ್ರದ ಮೂಲಕ ಸಚಿವ ಈಶ್ವರಪ್ಪ ಅವರು ತಮ್ಮ ಬಳಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಎಂದು ಹೇಳಿದರು.
ಬೊಮ್ಮಾಯಿ ಅವರ ಭ್ರಷ್ಟ ಸರ್ಕಾರ ತನ್ನ ಕಾರ್ಯಕರ್ತರನ್ನೇ ಬಿಟ್ಟಿಲ್ಲ ಎಂದಾದರೆ ಜನಸಾಮಾನ್ಯರನ್ನು ಇನ್ಯಾವ ಮಟ್ಟಿಗೆ ಲೂಟಿ ಮಾಡುತ್ತಿರಬಹುದು. ಸರ್ಕಾರ ವಿರುದ್ಧ 40% ಕಮಿಷನ್ ಆರೋಪ ಕೇಳಿ ಬಂದಾಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೌನಕ್ಕೆ ಶರಣಾದರು. ಅಮಿತ್ ಶಾ ಅವರು ಕ್ರಮ ಕೈಗೊಳ್ಳಲು ನಿರಾಕರಿಸಿದರು. ಪ್ರಧಾನಮಂತ್ರಿಗಳಂತೂ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ ಅಂತಿಮವಾಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಸಾವಿಗೆ ಸಚಿವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದೊಂದು ಭ್ರಷ್ಟಾಚಾರ, ಕೊಲೆ ಪ್ರಕರಣವಾಗಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ, ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಕೂಡಲೇ ಅವರನ್ನು ಬಂಧಿಸಬೇಕು. ಮುಖ್ಯಮಂತ್ರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಅವರೂ ಕೂಡ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಾಬೀತಾಗುತ್ತದೆ. ಸದಾ ನಾ ಖಾವೂಂಗಾ ನಾ ಖಾನೇದೂಂಗಾ ಎಂದು ಹೇಳುವ ಪ್ರಧಾನಿ ಮೋದಿ, ಅವರ ಮೂಗಿನ ಕೆಳಗೆ ರಾಜ್ಯದಲ್ಲಿ ಖಾವೂಂಗಾ, ಖಿಲಾವೂಂಗಾ ನಡುತ್ತಿದ್ದರೂ ಅದಕ್ಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಆರೋಪಿಸಿದರು.
ಬೊಮ್ಮಾಯಿ ಹಾಗೂ ಬಿಜೆಪಿ ಮುಂದೆ ಪರೀಕ್ಷೆ ಇದ್ದು, ಅವರ ನಡೆ ಏನು ಎಂಬುದು ಸಾಬೀತಾಗಲಿದೆ. ಕೇವಲ ಅಲ್ಪಸಂಖ್ಯಾತರ ವಿರುದ್ಧ ದಾಳಿ ಕೋಮು ಗಲಭೆಗಳ ಮೂಲಕ ಈ ವಿಚಾರಗಳನ್ನು ಮರೆಮಾಚುವ ಇವರ ಪ್ರಯತ್ನ ಬಹಿರಂಗವಾಗಲಿದೆ. ಮುಖ್ಯಮಂತ್ರಿಗಳು ಇವರ ವಿರುದ್ಧ ಸಂಜೆ ಒಳಗಾಗಿ ಈಶ್ವರಪ್ಪನ ವಿರುದ್ಧ ಭ್ರಷ್ಟಾಚಾರ, ಕೊಲೆ ಪ್ರಕರಣ ದಾಖಲಿಸಿ, ಅವರನ್ನು ವಾಜಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದರೆ ನಾವು ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಿ ಅವರ ರಾಜೀನಾಮೆಗೆ ಆಗ್ರಹಿಸುತ್ತೇವೆ ಎಂದರು.
ಶಾಂಭವಿ ಲಾಡ್ಜ್ನ ರೂಮ್ ನಂಬರ್ 207ರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ನ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್ಗೆ ಡೆತ್ನೋಟ್ ವಾಟ್ಸಪ್ ಮೆಸೇಜ್ ಕಳಿಸಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.
ವಾಟ್ಸಪ್ ಮೆಸೇಜ್ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್ ನೋಟ್ ಕಳಿಸಿದ್ದಾರೆ. ಈ ಡೆತ್ನೋಟ್ ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗೆ ಪೊಲೀಸರು ಮುಂದಾಗಿದ್ದರು. ಆಗ ಅವರ ಮೊಬೈಲ್ ಉಡುಪಿಯಲ್ಲಿ ಸಕ್ರಿಯವಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಾವು ಮಾಡಿದ 108 ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.
ಡೆತ್ ನೋಟ್ ಸಂದೇಶದಲ್ಲೇನಿದೆ?
ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ.
ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಬರೆದು ಸಂದೇಶ ಕಳಿಸಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications