Santosh Suicide Case: ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ
ಉಡುಪಿ, ಏಪ್ರಿಲ್ 13: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಕೆಎಸ್ ಈಶ್ವರಪ್ಪರನ್ನು ವಜಾಗೊಳಿಸಿ, ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಭ್ರಷ್ಟಾಚಾರ ಪ್ರಕರಣ ದಾಖಲಿಸಿ, ಬಂಧಿಸಿ ವಿಚಾರಣೆ ನಡೆಸಲು ಕಾಂಗ್ರೆಸ್ ನಿಯೋಗ ಇಂದು ಘನತೆವೆತ್ತ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ," ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಪಾಲರ ಭೇಟಿ ನಂತರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಈ ಪ್ರಕರಣ ಕಪ್ಪುಚುಕ್ಕೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೊದಲಿಂದಲೂ ಉತ್ತಮ ಆಡಳಿತ ನೀಡುತ್ತಾ ಬಂದಿದೆ. ಆದರೆ ಈಗ ಬಿಜೆಪಿ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರ ವಿರುದ್ಧ ಗುತ್ತಿಗೆದಾರರ ಸಂಘ ಧ್ವನಿ ಎತ್ತಿದೆ.
ಬಿಜೆಪಿ, ಹಿಂದೂ ವಾಹಿನಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಸಚಿವ ಈಶ್ವರಪ್ಪ ಭ್ರಷ್ಟಾಚಾರದ ಬಗ್ಗೆ ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

40 ಪರ್ಸೆಂಟ್ ಕಮೀಷನ್ ಬಗ್ಗೆ ಪ್ರಧಾನಿಗೆ ಪತ್ರ:
"ಗುತ್ತಿಗೆದಾರ ಸಂತೋಷ್ ಪಾಟೀಲ್ ಈಗ ಆತ್ಮಹತ್ಯೆ ಮಾಡಿಕೊಂಡು ತನ್ನ ಸಾವಿಗೆ ಸಚಿವರೇ ಕಾರಣ ಎಂದು ಬರೆದಿಟ್ಟಿದ್ದಾರೆ. ರಾಜ್ಯದಲ್ಲಿ ಗುತ್ತಿಗೆದಾರರಿಂದ ಶೇ. 40% ಕಮಿಷನ್ ಪಡೆಯಲು ಸರ್ಕಾರದ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಆಗ್ರಹಿಸುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿಗೆ ಈ ಹಿಂದೆಯೇ ಪತ್ರ ಬರೆದಿದ್ದರು. ಈ ವಿಚಾರ ಬಹಿರಂಗ ಪಡಿಸಲು ಶೇ. 40 ಕಮಿಷನ್ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗಬೇಕು ಎಂದು ಅಧಿವೇಶನದಲ್ಲಿ ಗೊತ್ತುವಳಿ ಮಂಡನೆ ಮಾಡಿದರೂ ಚರ್ಚೆಗೆ ಅವಕಾಶ ನೀಡದೆ ವಜಾಗೊಳಿಸಿದರು. ಬಹುಶಃ ಆ ಚರ್ಚೆ ಆಗಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ, ಸಂತೋಷ್ ಪಾಟೀಲ್ ಆತ್ಮಹತ್ಯೆ ಆಗುತ್ತಿರಲಿಲ್ಲ ಎಂದು ಭಾವಿಸುತ್ತೇನೆ." ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಚಿವರ ಹೆಸರು ಬರೆದಿಟ್ಟು ಸಂತೋಷ್ ಆತ್ಮಹತ್ಯೆ:
"ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬ ಸದಸ್ಯರು ಹಾಗೂ ಅವರ ಪತ್ನಿಯ ನೋವನ್ನು ಎಲ್ಲರೂ ನೋಡುತ್ತಿದ್ದೀರಿ. ಸಂತೋಷ್ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು ಉಡುಪಿಗೆ ಹೋಗಿದ್ದ ಎಂದು ಮಾಧ್ಯಮಗಳ ವರದಿ ಬಂದಿವೆ. ತನಗೆ ಯಾರಿಂದಲೂ ನ್ಯಾಯ ಸಿಗುವ ಸ್ಪಂದನೆ ಇಲ್ಲದ ಕಾರಣಕ್ಕೆ ಆತ ನೊಂದು ಭ್ರಷ್ಟಾಚಾರಕ್ಕೆ ಕಾರಣರಾದ ಸಚಿವರ ಹೆಸರು ಬರೆದು ಸಾವಿಗೆ ಶರಣಾಗಿದ್ದಾನೆ. ರಾಜ್ಯದಲ್ಲಿ ಇರುವ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆಯೇ ಹೊರತು ಹೆಚ್ಚಿನದಾಗಿ ಏನನ್ನೂ ಕೇಳುತ್ತಿಲ್ಲ. ಸಾಮಾನ್ಯ ಜನರ ಮೇಲೆ ಹೇಗೆ ಪ್ರಕರಣ ದಾಖಲಾಗಿ ಕ್ರಮ ಜರುಗಿಸಲಾಗುತ್ತದೆಯೋ ಅದೇ ರೀತಿ ಇಲ್ಲೂ ಕ್ರಮ ಜರುಗಿಸಬೇಕು," ಎಂದು ಆಗ್ರಹಿಸಿದರು.
Koo Appಈಶ್ವರಪ್ಪನವರು ಕೊಲೆ ಆರೋಪ ಎದುರಿಸುತ್ತಿರುವುದರಿಂದ ಸಚಿವ ಸಂಪುಟದಲ್ಲಿರಲು ಅವಕಾಶ ನೀಡಬಾರದು. ಇದು ದೊಡ್ಡ ಅಪರಾಧ, ಇದಕ್ಕೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಶಿಕ್ಷೆಯನ್ನೂ ನೀಡಬಹುದಾಗಿದೆ. ಸತ್ತಿರುವ ವ್ಯಕ್ತಿಯೇ ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ನೇರ ಆರೋಪ ಮಾಡಿದ್ದು ಇದಕ್ಕಿಂತ ದೊಡ್ಡ ಸಾಕ್ಷಿ ಮತ್ತೇನು ಬೇಕು? - @siddaramaiah - ಕರ್ನಾಟಕ ಕಾಂಗ್ರೆಸ್ (@inckarnataka) 13 Apr 2022
ಸಚಿವ ಈಶ್ವರಪ್ಪ ಭ್ರಷ್ಟಾಚಾರದ ಪಿತಾಮಹ:
ಸಚಿವ ಈಶ್ವರಪ್ಪ ರಾಜ್ಯ ರಾಜಕೀಯದಲ್ಲಿ ಭ್ರಷ್ಟಾಚಾರದ ಪಿತಾಮಹ. ಕಳೆದ ಬಾರಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅವರ ಮನೆಯಲ್ಲಿ ನೋಟು ಎಣಿಸುವ ಯಂತ್ರ ಸಿಕ್ಕಿದ್ದವು. ಅವರ ವಿರುದ್ಧ ಈಗ ಅವರದೇ ಪಕ್ಷದ ಕಾರ್ಯಕರ್ತ 40% ಕಮಿಷನ್ ಆರೋಪ ಮಾಡಿದ್ದಾನೆ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದು, ಅವರ ಬಂಧನ ಆಗಬೇಕು. ಈ ಎಫ್ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಬೇಕು. ಈ ಪ್ರಕರಣದ ವಿಚಾರಣೆಯನ್ನು ಯಾರು ಮಾಡುತ್ತಾರೋ ಮಾಡಲಿ. ಆದರೆ ಆತ್ಮಹತ್ಯೆಗೆ ಪ್ರಚೋದನೆ ಜೊತೆಗೆ ಭ್ರಷ್ಟಾಚಾರ ಪ್ರಕರಣ ದಾಖಲಿಸಿ ವಿಚಾರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಹೋರಾಟ ನಿಲ್ಲಿಸಲ್ಲ ಎಂದ ಕಾಂಗ್ರೆಸ್:
ಬಿಜೆಪಿಯವರು ಈಶ್ವರಪ್ಪರನ್ನು ಇಟ್ಟುಕೊಳ್ಳುತ್ತಾರೋ ಅಥವಾ ವಜಾ ಮಾಡುತ್ತಾರೋ ಎನ್ನುವುದು ಮುಂದಿನ ವಿಚಾರ. ಆದರೆ ಕೂಡಲೇ ಅವರನ್ನು ಬಂಧಿಸಬೇಕೆಂದು ರಾಜ್ಯಪಾಲರಿಗೆ ಮನವಿ ನೀಡಿದ್ದೇವೆ. ಮನವಿ ಸಲ್ಲಿಕೆಗೆ ಸಮಯಾವಕಾಶ ಕೊಟ್ಟ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯಪಾಲರು ನಿನ್ನೆ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಜೊತೆ ಮಾತನಾಡಿದ್ದಾರೆ. ಸಚಿವರು ತಮಗೆ ಆತ ಯಾರು ಎಂದು ಗೊತ್ತಿಲ್ಲ ಎಂದಿದ್ದಾರಂತೆ. ಮಾಧ್ಯಮದವರು ಈಶ್ವರಪ್ಪ ಹಾಗೂ ಮೃತ ಸಂತೋಷ್ ಜೊತೆಗಿರುವ ಭಾವಚಿತ್ರಗಳನ್ನು ಪ್ರಕಟಿಸಿ, ಅವರ ಸುಳ್ಳನ್ನು ಬಯಲು ಮಾಡಿದ್ದಾರೆ. ನಾವು ಈ ಹೋರಾಟವನ್ನು ಇಲ್ಲಿಗೆ ಬಿಡುವುದಿಲ್ಲ. ಬೆಂಗಳೂರಿನಲ್ಲಿ ಹೋರಾಟ ಮಾಡಬಾರದು ಎಂದು ತೀರ್ಪು ಇದ್ದರೂ ಸರಿ. ಈ ಹೋರಾಟ ಜನರ ಆಸ್ತಿ, ನಾವು ಶಿಕ್ಷೆ ಅನುಭವಿಸಿದರೂ ಸರಿ, ಹೋರಾಟ ಮಾಡಿಯೇ ತೀರುತ್ತೇವೆ. ಭ್ರಷ್ಟಾಚಾರ ರಹಿತ ರಾಜ್ಯ ಮಾಡುವುದು ಕಾಂಗ್ರೆಸ್ ಪಕ್ಷದ ನಿಲುವು. ಇದಕ್ಕೆ ಎಲ್ಲರ ಸಹಕಾರ ಬೇಕಿದೆ,' ಎಂದು ಕಾಂಗ್ರೆಸ್ ಹೇಳಿದೆ.
ರಾಜ್ಯಪಾಲರ ಎದುರು ಕಾಂಗ್ರೆಸ್ ನಿಯೋಗದ ಮನವಿ:
- ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಮಂತ್ರಿಮಂಡಲದಿಂದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು,
- ಕೆ.ಎಸ್.ಈಶ್ವರಪ್ಪ ಮತ್ತು ಅವರ ಮಿತ್ರರ ಕುಮ್ಮಕ್ಕಿನಿಂದ ಸಂತೋಷ್ ಕೆ. ಪಾಟೀಲ್ ಆತ್ಮಹತ್ಯೆಗೆ ಶರಣಾದ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು
- IPC ಯ ಸೆಕ್ಷನ್-306 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್-13 ಮತ್ತು ಕಾನೂನಿನ ಇತರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಕ್ರಿಮಿನಲ್ ಮೊಕದ್ದಮೆಯನ್ನು ತಕ್ಷಣವೇ ದಾಖಲಿಸಬೇಕು
- ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications