ಕನ್ನಡ ಮಾತನಾಡಲ್ಲ ಎಂದಿದ್ದ ಲೇಡಿ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲೇ ಕ್ಷಮೆ
ʼಕರ್ನಾಟಕದಲ್ಲಿ ಎಂದಿಗೂ ನಾನು ಕನ್ನಡ ಮಾತನಾಡುವುದೇ ಇಲ್ಲʼ ಎಂದು ಬೆಂಗಳೂರಿನ ಚಂದಾಪುರದ ಎಸ್ಬಿಐ ಬ್ಯಾಂಕ್ ಲೇಡಿ ಮ್ಯಾನೇಜರ್ ದರ್ಪ ತೋರಿದ್ದರು. ಈ ವಿಡಿಯೋ ವೈರಲ್ ಆದ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಆ ಮಹಿಳೆ ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿರುವ ವಿಡಿಯೋ ಕೂಡ ಇದೀಗ ವೈರಲ್ ಆಗಿದ್ದು, ಲೇಡಿ ಮ್ಯಾನೇಜರ್ ಕಾಟಾಚಾರಕ್ಕೆ ಕ್ಷಮೆ ಕೇಳಿದ್ದಾರೆ ಎಂದು ದೂರುತ್ತಿದ್ದಾರೆ. ವಿಡಿಯೋದಲ್ಲಿ ಮಹಿಳೆ ಯಾವುದೇ ಪಶ್ಚಾತಾಪವಿಲ್ಲದೆ ನಗುತ್ತಾ ಕ್ಷಮೆ ಕೇಳಿರುವುದು ಮತ್ತೆ ಆಕ್ರೋಶಕ್ಕೆ ಕಾರಣವಾಗಿದೆ.
ಎಸ್ಬಿಐ ಬ್ಯಾಂಕ್ನ ಮ್ಯಾನೇಜರ್ ಹುದ್ದೆಯಲ್ಲಿರುವ ಮಹಿಳೆಯು ಕನ್ನಡಿಗರೊಂದಿಗೆ ದರ್ಪದಿಂದ ಮಾತನಾಡಿದ್ದರು. ಬ್ಯಾಂಕ್ಗೆ ಹೋಗಿದ್ದ ಕನ್ನಡಿಗರ ಕನ್ನಡದಲ್ಲಿ ಸೇವೆ ಕೊಡಿ ಎಂದು ಕೇಳಿದ್ದಕ್ಕೆ, ಇದು ಕರ್ನಾಟಕ ಆದ್ರೆ ನನಗೇನು? ಇದು ಇಂಡಿಯಾ, ನಾನು ಹಿಂದಿಯಲ್ಲಿ ಮಾತನಾಡುತ್ತೇನೆ. ಕರ್ನಾಟಕದಲ್ಲಿ ನಾನು ಎಂದಿಗೂ ಕನ್ನಡದಲ್ಲಿ ಮಾತನಾಡುವುದೇ ಇಲ್ಲ, ಏನಾದ್ರೂ ಮಾಡ್ಕೊಳ್ಳಿ ಎಂದು ಚಾಲೆಂಜ್ ಕೂಡ ಮಾಡಿದ್ದರು.

ಇದನ್ನು ಕನ್ನಡಿಗ ತನ್ನ ಫೋನ್ನಲ್ಲಿ ರೆಕಾರ್ಡ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಇದು ಎಲ್ಲೆಡೆ ಹರಿದಾಡಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಎಸ್ಬಿಐಗೆ ಟ್ಯಾಗ್ ಮಾಡಿ ಕೂಡಲೇ ನಿಮ್ಮ ಈ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿ ಎಂದು ಆಗ್ರಹಿಸಿದ್ದರು. ಇದರಿಂದ ಎಚ್ಚೆತ್ತ ಎಸ್ಬಿಐ ಕೊನೆಗೂ ಲೇಡಿ ಮ್ಯಾನೇಜರ್ ಕಡೆಯಿಂದ ಕ್ಷಮೆ ಕೇಳಿಸಿದೆ.
ಬೇಕಾಬಿಟ್ಟಿ ಕ್ಷಮೆ ಬೇಕಾಗಿಲ್ಲ!
ವಿಡಿಯೋ ಮೂಲಕ ಕ್ಷಮೆ ಕೇಳಿರುವ ಬ್ಯಾಂಕ್ ಮ್ಯಾನೇಜರ್, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ, ನಾನು ಕನ್ನಡದಲ್ಲೇ ವ್ಯವಹರಿಸಲು ಅನುಕೂಲ ಮಾಡಿಕೊಡುತ್ತೇನೆ, ಪ್ರಯತ್ನಿಸುತ್ತೇನೆ ಎಂದು ನಗುತ್ತಾ ಕ್ಷಮೆ ಕೇಳಿದ್ದಾರೆ. ಈ ವಿಡಿಯೋಗೂ ಆಕ್ರೋಶ ವ್ಯಕ್ತವಾಗಿದೆ. ಲೇಡಿ ಮ್ಯಾನೇಜರ್ ಬೇಕಾಬಿಟ್ಟಿ ಕಾಟಾಚಾರಕ್ಕೆ ಕ್ಷಮೆ ಕೇಳಿದ್ದಾರೆ. ಅವರ ಮುಖದಲ್ಲಿ ತಾನು ಮಾಡಿರುವ ತಪ್ಪಿನ ಬಗ್ಗೆ ಪಶ್ಚಾತಾಪವೇ ಇಲ್ಲ. ನಗುತ್ತಾ ಕೇಳಿರುವುದು ಅದೆಂತಹ ಕ್ಷಮೆ? ಮೇಲಿನವರ ಒತ್ತಾಯಕ್ಕಷ್ಟೇ ಆ ಮಹಿಳೆ ಕ್ಷಮೆ ಕೇಳಿದ್ದಾರೆ. ಈ ರೀತಿಯ ಕ್ಷಮೆ ನಮಗೆ ಬೇಕಾಗಿಲ್ಲ. ಎಸ್ಬಿಐ ಖುದ್ದಾಗಿ ಈ ಬಗ್ಗೆ ಪತ್ರದ ಮೂಲಕ ಕ್ಷಮೆ ಕೇಳಬೇಕು. ಈ ಮಹಿಳೆಯನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಖಂಡನೆ
ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸುತ್ತಿರುವುದು ತೀವ್ರವಾಗಿ ಖಂಡನೀಯ. ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್ಬಿಐನ ತ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯವನ್ನು ಈಗ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಅಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಎಲ್ಲ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು. ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು. ಭಾರತದಾದ್ಯಂತ ಎಲ್ಲ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಸೇವೆಗಳ ಇಲಾಖೆಯನ್ನು ನಾನು ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದಿದ್ದಾರೆ.












Click it and Unblock the Notifications