ಡಿಕೆಶಿ, ಯಡಿಯೂರಪ್ಪರಿಗೆ ಕಾಡಲಿದೆ ಬೆನ್ನಿಗಾನಹಳ್ಳಿ ಭೂ ಹಗರಣ
ಬೆಂಗಳೂರು, ಆಗಸ್ಟ್ 09: ಗುಜರಾತಿನಲ್ಲಿ ಸಂಭ್ರಮಾಚರಣೆಗೆ ಕಾರಣರಾದ ಖುಷಿಯಲ್ಲಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟಿನಿಂದ ಕಹಿ ಸುದ್ದಿ ಸಿಕ್ಕಿದೆ.
ಐಟಿ ದಾಳಿಯನ್ನು ಎದುರಿಸಿ, ಗುಜರಾತ್ ಶಾಸಕರನ್ನು ರಕ್ಷಿಸಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಬೆನ್ನಿಗಾನಹಳ್ಳಿ ಡಿನೋಟಿಫೈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ರಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಸುಪ್ರೀಂಕೋರ್ಟ್ನಲ್ಲಿ ಈ ಸಂಬಂಧ ವಿಶೇಷ ಮೇಲ್ಮನವಿ ಸಲ್ಲಿಸಿ ಪ್ರಕರಣವನ್ನು ಮರು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದರು.
ಮೇಲ್ಮನವಿ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್, ಈ ಪ್ರಕರಣದ ವಿಚಾರಣೆಯನ್ನು ಆ.29ರಂದು ತ್ರಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ ಎಂದರು.
ಕರ್ನಾಟಕ ಹೈಕೋರ್ಟಿನ ನ್ಯಾ ಆನಂದ ಬೈರಾರೆಡ್ಡಿ ಅವರಿದ್ದ ನ್ಯಾಯಪೀಠ ಕಳೆದ ಡಿಸೆಂಬರ್ 18ರಂದು ಈ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಮೇಲ್ಮನವಿ ಸಲ್ಲಿಸಿದ್ದರು.
ಇಂದಿರಾನಗರದ ಸಮೀಪ ಬೆನ್ನಿಗಾನಹಳ್ಳಿಯಲ್ಲಿ ಸರ್ವೆ ನಂಬರ್ 20ರ 4.20 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಶಿವಕುಮಾರ್ ಅವರು ಶ್ರೀನಿವಾಸನ್ ಹೆಸರಿನಲ್ಲಿ ಅರ್ಜಿ ಸಲ್ಲಿಸಿ, ಬೆನ್ನಿಗಾನಹಳ್ಳಿಯ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿದ್ದ ಯಡಿಯೂರಪ್ಪ, 4.20 ಎಕರೆ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟು 2010ರ ಮೇ 13ರಂದು ಆದೇಶ ಹೊರಡಿಸಿದ್ದರು. NGEF ವಸತಿ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಈ ಭೂಮಿಯನ್ನು 1986ರಲ್ಲಿ ಗುರುತಿಸಿತ್ತು.












Click it and Unblock the Notifications