ಬಿಬಿಎಂಪಿ ಚುನಾವಣೆ ಎದುರಿಸಲು ನಿಮಗೆ ಏನು ತೊಂದರೆ?
ಬೆಂಗಳೂರು, ಜುಲೈ 20 : 'ಬಿಬಿಎಂಪಿ ಚುನಾವಣೆ ಎದುರಿಸಲು ನಿಮಗೆ ಏನು ತೊಂದರೆ?' ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಈಗಾಗಲೇ ಪ್ರಕಟಗೊಂಡಿರುವ ವೇಳಾಪಟ್ಟಿಯಂತೆ ಚುನಾವಣೆ ನಡೆಯಲಿದೆ.
ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ನೀಡಿದ್ದ 8 ವಾರಗಳ ಕಾಲಾವಕಾಶದ ಬಗ್ಗೆ ಸ್ಪಷ್ಟನೆ ಕೋರಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಕೋರ್ಟ್, ಕಾಲಮಿತಿಯಂತೆ ಚುನಾವಣೆ ನಡೆಸಿ, ಚುನಾವಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು. [ಬಿಬಿಎಂಪಿ ಚುನಾವಣೆ ವೇಳಾಪಟ್ಟಿ]

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ತ್ರಿ ಸದಸ್ಯ ಪೀಠ, 'ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ನಿಮಗೆ ಏನು ತೊಂದರೆ? ಎಂದು ಸರ್ಕಾರವನ್ನು ಪ್ರಶ್ನಿಸಿತು. ಕಾಲಮಿತಿಯಂತೆ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಕೈಗೆ ಆಡಳಿತ ನೀಡಿ ಎಂದು ಸೂಚಿಸಿತು. [ಬಿಬಿಎಂಪಿಯನ್ನು 5 ಭಾಗ ಮಾಡಿ: ಬಿಎಸ್ ಪಾಟೀಲ್ ಸಮಿತಿ]
ಸದ್ಯ, ಬಿಬಿಎಂಪಿ ಆಡಳಿತ ಆಡಳಿತಾಧಿಕಾರಿ ಕೈಯಲ್ಲಿದೆ. ಬೇಗನೆ ಚುನಾವಣೆಯನ್ನು ನಡೆಸಿ ಜನಪ್ರತಿನಿಧಿಗಳ ಕೈಗೆ ಆಡಳಿತ ಕೊಡಿ ಎಂದು ಸೂಚನೆ ನೀಡಿರುವ ಕೋರ್ಟ್, ಅರ್ಜಿಯ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದೆ.
ಅಂದಹಾಗೆ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯಂತೆ 198 ವಾರ್ಡ್ಗಳ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22 ರಂದು ಮತದಾನ ನಡೆಯಲಿದ್ದು, ಆಗಸ್ಟ್ 25ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications