SC/ST ಬಡ್ತಿ ಮೀಸಲಾತಿ: ಸುಪ್ರೀಂ ತೀರ್ಪಿನ ವಿರುದ್ಧ ಸುಗ್ರೀವಾಜ್ಞೆಗೆ ಒತ್ತಾಯ
ಬೆಂಗಳೂರು, ಜೂನ್ 13: ಪರಿಶಿಷ್ಟ ಜಾತಿ ಹಾಗೂ ಪಂಗಡದ ನೌಕರರ ಹಿತಾಸಕ್ತಿ ಕಾಪಾಡಲು ಸರಕಾರ ಎಲ್ಲ ಕ್ರಮ ತೆಗೆದುಕೊಂಡಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಮಂಗಳವಾರ ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ನೌಕರರಿಗೆ ವಿರುದ್ಧವಾಗಿರುವ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ತಮ್ಮ ಕಳಕಳಿ ವ್ಯಕ್ತಪಡಿಸಲು ನಗರದ ಟೌನ್ ಹಾಲ್ ಮುಂದೆ ರಾಜ್ಯದ ಎಲ್ಲಾ ದಲಿತ ಸಂಘಟನೆಗಳ ಮುಖ್ಯಸ್ಥರು ಸಮನ್ವಯ ಸಮಿತಿಯ ಅಡಿಯಲ್ಲಿ ನಡೆಸುತ್ತಿದ್ದ ರಾಜ್ಯ ಮಟ್ಟದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿದ ಅವರು ಮಾತನಾಡಿದರು.

ಸುಪ್ರೀಂ ಕೋರ್ಟ್ ಬಡ್ತಿ ಮೀಸಲಾತಿ ಬೇಡ ಎನ್ನುವ ಆಜ್ಞೆಯನ್ನು ನೀಡಿದೆ. ರಾಜ್ಯ ಸರಕಾರ ಈಗಾಗಲೇ ಪರಿಶೀಲನೆ ಅರ್ಜಿ ಸಲ್ಲಿಸಿದೆ. ಈಗಾಗಲೇ ಬಡ್ತಿ ನೀಡಿದ್ದೇವೆ, ಆದರೆ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇವರಿಗೆ ಸಿಕ್ಕಿರುವ ಬಡ್ತಿಯನ್ನು ಹಿಂಪಡೆಯುವುದು ಸರಿಯಲ್ಲ ಎಂದರು.
ಈ ನಿಟ್ಟಿನಲ್ಲಿ ದಲಿತ ಮುಖಂಡರು ನೀಡಿರುವ ಮನವಿಯನ್ನು ಸ್ವೀಕರಿಸಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ವಿಷಯದ ಗಂಭೀರತೆಯನ್ನು ತರುತ್ತೇನೆ. ಸಂಸತ್ತಿಲ್ಲೂ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಕಾನೂನು ರಚನೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೂಡಾ ಕಾರ್ಯತತ್ಪರ ಆಗಬೇಕು ಎಂದರು.

ಪರಿಶಿಷ್ಟ ಸರಕಾರಿ ನೌಕರರ ಬಡ್ತಿ ಮೀಸಲಾತಿಗೆ ಧಕ್ಕೆ ತಂದಿರುವ ಸುಪ್ರೀಂ ಕೋರ್ಟ್ ತೀರ್ಪಿನ ದುಷ್ಪರಿಣಾಮಗಳನ್ನು ತಡೆಯಲು ಈ ಕೂಡಲೇ ಸುಗ್ರೀವಾಜ್ಞೆ ಹೊರಡಿಸುವಂತೆ ಆಗ್ರಹಿಸಿ ಮಂಗಳವಾರ ರಾಜ್ಯದ ಎಲ್ಲಾ ದಲಿತ ಸಂಘಟನೆಗಳು ಒಗ್ಗಟ್ಟಾಗಿ ಪ್ರತಿಭಟನೆ ನಡೆಸಿದವು.
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹಾಗೂ ಶಾಸಕ ಕೆ ಎಸ್ ಪುಟ್ಟಣ್ಣಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ರಾಜ್ಯ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು, ಲಕ್ಷ್ಮಿನಾರಾಯಣ ನಾಗವಾರ.
ಎನ್ ವೆಂಕಟೇಶ್, ಡಾ. ಎಮ್.ವೆಂಕಟಸ್ವಾಮಿ, ಡಾ. ಎನ್ ಮೂರ್ತಿ, ಶ್ರೀಧರ ಕಲವೀರ ಸೇರಿದಂತೆ ಎಲ್ಲಾ ಸಂಘನೆಗಳ ಪ್ರಮುಖರು ಭಾಗವಹಿಸಿದ್ದರು. ಸಾವಿರಕ್ಕೂ ಹೆಚ್ಚು ಸರಕಾರಿ ನೌಕರರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ದಲಿತ ಸಂಘಟನೆಗಳ ಈ ಬಾರಿ ಒಗ್ಗಟ್ಟಿನಿಂದ ಪ್ರತಿಭಟನೆಗೆ ಮುಂದಾಗಿದ್ದು ವಿಶೇಷವಾಗಿತ್ತು.












Click it and Unblock the Notifications