ರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ: ಡಿಜಿಪಿಗೆ ಸಿಎಂ ಕೊಟ್ಟ ಸಂದೇಶವೇನು?
ಬೆಂಗಳೂರು, ಡಿಸೆಂಬರ್.19: ಪೌರತ್ವ ತಿದ್ದುಪಡಿ ಕಾಯ್ದೆ ಈಶಾನ್ಯ ರಾಜ್ಯಗಳಷ್ಟೇ ಕರ್ನಾಟಕದಲ್ಲೂ ಆಕ್ರೋಶದ ಕಿಚ್ಚನ್ನು ಹೊತ್ತಿಸಿದೆ. ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿ ಹಾಗೂ ಸಂಘಟನಗೆಳ ಜ್ವಾಲಾಮುಖಿಗೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆದ ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ರಾಜ್ಯದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ದೆಹಲಿ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ 3 ದಿನಗಳ ಕಾಲ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಡಿಜಿಪಿ ನೀಲಮಣಿ ಎನ್ ರಾಜು ಮಾಹಿತಿ ನೀಡಿದ್ದಾರೆ.

ಸಿಎಂ ನಿವಾಸಕ್ಕೆ ಡಿಜಿಪಿ ನೀಲಮಣಿ ರಾಜು ಭೇಟಿ:
ಬೆಳ್ಳಂಬೆಳಗ್ಗೆ ನಗರ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿಎಸ್ ವೈ ನಿವಾಸಕ್ಕೆ ಡಿಜಿಪಿ ನೀಲಮಣಿ ಎನ್ ರಾಜು ಭೇಟಿ ನೀಡಿದರು. ರಾಜ್ಯಾದ್ಯಂತ 3 ದಿನಗಳ ಕಾಲ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಡಿಜಿಪಿ ಮಾಹಿತಿ ನೀಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಈಗಾಗಲೇ ಬೇರೆ ರಾಜ್ಯಗಳಲ್ಲಿ ಪೌರತ್ವ ಕಾಯ್ದೆ ವಿರುದ್ಧ ನಡೆಸಿದ ಹೋರಾಟ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ನಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಆ ರೀತಿಯ ಹಿಂಸಾಚಾರ ನಡೆಯದಂತೆ ಮುಂಜಾಗ್ರತೆ ವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುನ್ಸೂಚನೆ ನೀಡಿದ್ದಾರೆ.












Click it and Unblock the Notifications