ಆರ್ ಆರ್ ನಗರ ಮತ ಎಣಿಕೆ: ಕಮಿಷನರ್ ಕಮಲ್ ಪಂತ್ ಮಹತ್ವದ ಎಚ್ಚರಿಕೆ!
ಬೆಂಗಳೂರು, ನ. 09: ಜಿದ್ದಾಜಿದ್ದಿನ ಕಣವಾಗಿರುವ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಾಳೆ (ನ.10) ನಡೆಯಲಿದೆ. ಈ ಸಂದರ್ಭದಲ್ಲಿ ಭಾರಿ ಬಿಗಿ ಬಂದೋಬಸ್ತನ್ನು ಪೊಲೀಸ್ ಇಲಾಖೆ ಕೈಗೊಂಡಿದೆ.
Recommended Video
ಆರ್ಆರ್ ನಗರದಲ್ಲಿ ಭದ್ರತೆ ಕುರಿತು ಮಾತನಾಡಿರುವ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಡೀ ಕ್ಷೇತ್ರದಾದ್ಯಂತ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿಯುತ ಮತ ಎಣಿಕೆ ಪ್ರಕ್ರಿಯೆಗೆ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕಿಡಿಗೇಡಿಗಳಿಗೆ ಕಠಿಣ ಎಚ್ಚರಿಕೆ ಸಂದೇಶ ರವಾನಿಸಿದ್ದು, ಮತ ಎಣಿಕೆ ನಂತರ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸಕಲ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಉಪ ಚುನಾವಣೆ: ಆರ್ಆರ್ ನಗರ ಮತ ಎಣಿಕೆಗೆ ಸಕಲ ಸಿದ್ಧತೆ!
ಈ ಬಗ್ಗೆ ಆರ್ ಆರ್ ನಗರದ ಜ್ಞಾನಾಕ್ಷಿ ವಿದ್ಯಾನಿಕೇತನ್ ಶಾಲೆ(ಮತ ಎಣಿಕೆ ಕೇಂದ್ರ)ಯಲ್ಲಿ ಕಮಲ್ ಪಂತ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಆರ್ ಆರ್ ನಗರದಲ್ಲಿ ಚುನಾವಣಾ ಪ್ರಕ್ರಿಯೆ ಶಾಂತ ರೀತಿಯಲ್ಲಿ ನಡೆದಿದೆ. ಇಂದು (ನ.09) ಸ್ಟ್ರಾಂಗ್ ರೂಂ ಪರಿಶೀಲನೆ ನಡೆಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಒಟ್ಟು 4 ಹಂತದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ರೀತಿಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ನೂರು ಮೀಟರ್ ವ್ಯಾಪ್ತಿಯಲ್ಲಿ ನಿಬಂಧನೆ!
ಮತ ಎಣಿಕೆ ಕೇಂದ್ರದ ಎರಡೂ ಕಡೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಬಂಧನೆಯಿರಲಿದ್ದು, ಚುನಾವಣಾ ಆಯೋಗದಿಂದ ಪಾಸ್ ಪಡೆದವರಿಗೆ ಮಾತ್ರ ಒಳಗೆ ಅವಕಾಶ ನೀಡಲಾಗುತ್ತದೆ. ಮುಖ್ಯ ದ್ವಾರದಲ್ಲಿ ಹೆಚ್ಚು ಪೊಲೀಸ್ ಭದ್ರತೆ ಮಾಡಲಾಗಿದೆ. ಗುರುತಿನ ಚೀಟಿ ಪರಿಶೀಲನೆ ಮಾಡಿದ ಬಳಿಕ ಮತ ಎಣಿಕೆ ಕೇಂದ್ರದ ಒಳಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
1,670 ಭದ್ರತಾ ಸಿಬ್ಬಂದಿ ನಿಯೋಜನೆ
ಮತ ಎಣಿಕೆ ಕೇಂದ್ರದಲ್ಲಿ 1 ಡಿ.ಸಿ.ಪಿ, 4 ಎ.ಸಿ.ಪಿ, 20 ಪಿ.ಐ, 48 ಪಿ.ಐ.ಸಿ, 76 ಎ.ಎಸ್.ಐ, 360 ಹೆಚ್.ಸಿ., ಪಿ.ಸಿ, 83 ಮಪ್ತಿ ಪೊಲೀಸರು ಸೇರಿ 592 ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 899 ಸೇರಿದಂತೆ ಒಟ್ಟು 1,670 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 36 ಕೆ.ಎಸ್.ಆರ್.ಪಿ ಹಾಗೂ ಸಿ.ಎ.ಆರ್ ಭದ್ರತಾ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ.
ಮದ್ಯ ಮಾರಾಟ ನಿಷೇಧ
ಈ ಭಾಗದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಾಳೆ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಈ ಕ್ಷೇತ್ರದಲ್ಲಿ ಹೆಚ್ಚು ಜನ, ಕಾರ್ಯಕ್ರಮ ನಡೆಯುವ ಹಾಗಿಲ್ಲ. ಅಲ್ಲದೆ ಈ ಕ್ಷೇತ್ರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿರಲಾಗಿದೆ. ಕೋವಿಡ್ ಇರುವ ಪರಿಣಾಮ ಮತ ಎಣಿಕೆ ಕೇಂದ್ರದ ಬಳಿ ಹೆಚ್ಚು ಜನ ಸೇರುವಂತಿಲ್ಲ.
ಸಂಭ್ರಮಾಚರಣೆ ಮಾಡುವಂತಿಲ್ಲ
ಜೊತೆಗೆ ಯಾರೂ ಕೂಡ ಸಂಭ್ರಮಾಚರಣೆ ಮಾಡುವಂತಿಲ್ಲ ಹಾಗೂ ಪಟಾಕಿ ಹಚ್ಚುವ ಹಾಗಿಲ್ಲ. ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಕಠಿಣಕ್ರಮ ಕೈಗೊಳ್ಳಲಾಗುತ್ತದೆ. ಮತ ಎಣಿಕೆ ಕೇಂದ್ರದ ರಸ್ತೆ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಇರುವುದಿಲ್ಲ. ವಾಹನ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.