ಅಮ್ನೆಸ್ಟಿ ಕೇಸ್ : ದೇಶದ್ರೋಹಿಗಳ ವಿರುದ್ಧ ಕಾನೂನು ಕ್ರಮ: ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 16: ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯಲ್ಲಿ ನಡೆದ ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಫ್ ಇಆರ್ ಹಾಕಿದ್ದಾರೆ. ಕಾನೂನು ಪ್ರಕಾರ ಏನು ಕ್ರಮ ಜರುಗಿಸಬೇಕೋ ಅದನ್ನು ಜರುಗಿಸುತ್ತಾರೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.[ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ]
ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಈ ಪ್ರಕರಣದ ಬಗ್ಗೆ ಕಾಳಜಿ ವಹಿಸಿ, ಅದ್ಯತೆ ಮೇರೆಗೆ ಗಮನ ಹರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಲಿಪ್ಪಿಂಗ್ ಹಾಗೂ ವಿಡಿಯೋಗಳನ್ನು ಪರಿಶೀಲಿಸುತ್ತಿದ್ದಾರೆ. ತನಿಖೆ ನಡೆಯುತ್ತಿದ್ದು, ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ 'ಆಜಾದಿ ಘೋಷಣೆ' ಕೂಗಿದ ಆರೋಪ ಹೊತ್ತಿರುವ ವಿದ್ಯಾರ್ಥಿಗಳ ಗುರುತು ಪತ್ತೆ ಕಾರ್ಯ ಸಾಗಿದೆ. ದೇಶ ದ್ರೋಹಿ ಕೇಸ್ ದಾಖಲಾಗಿದೆ. [ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]
ಸಿಸಿಟಿವಿ ಫುಟೇಜ್, ವಿಡಿಯೋ ಸಾಕ್ಷಿಯನ್ನು ಪರಿಶೀಲನೆಗಾಗಿ ಫೊರೆನ್ಸಿಕ್ ಲ್ಯಾಬಿಗೆ ಕಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ದೇಶದ್ರೋಹಿ ಘೋಷಣೆ ಕೂಗುವ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದ್ದಲ್ಲದೆ, ವಿವಾದಿತ ಕಾರ್ಯಕ್ರಮ ಆಯೋಜಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.












Click it and Unblock the Notifications