ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರುವವರ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕದಲ್ಲಿ ಸದ್ಯಕ್ಕೆ ಕೊರೊನಾ ಪ್ರಕರಣಗಳು ತಗ್ಗಿರಬಹುದು. ಆದರೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಇತ್ತೀಚಿನ ಅಂಕಿ ಅಂಶಗಳನ್ನು ಪರಿಗಣಿಸಿದರೆ ಕೊರೊನಾ ಕುರಿತು ಹಿಂದಿಗಿಂತಲೂ ಹೆಚ್ಚು ಜಾಗರೂಕತೆಯಿಂದಿರಬೇಕಾದ ಅವಶ್ಯಕತೆಯನ್ನು ಎತ್ತಿತೋರುತ್ತಿದೆ ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಳೆದ 30 ದಿನಗಳಲ್ಲಿ ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ದೈನಂದಿನ ಸರಾಸರಿ ಪ್ರಮಾಣ 316 ಇದ್ದು, ಹಬ್ಬಗಳು ಆರಂಭವಾಗುತ್ತಿದ್ದಂತೆಯೇ ಸೋಂಕಿನಿಂದ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಕಳೆದ ಒಂದು ವಾರದಲ್ಲಿ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿನಿಂದ ದಾಖಲಾಗುತ್ತಿರುವವರ ಪ್ರಮಾಣ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ 131 ಹೊಸ ಕೊರೊನಾ ರೋಗಿಗಳು ದಾಖಲಾಗಿದ್ದಾರೆ. ಇದು ಅದಕ್ಕೂ ಹಿಂದಿನ ವಾರಕ್ಕಿಂತ ಶೇ 19ರಷ್ಟು ಹೆಚ್ಚಿದೆ ಹಾಗೂ ಹದಿನೈದು ದಿನಗಳ ಹಿಂದೆ ದಾಖಲಾದ 86 ರೋಗಿಗಳಿಗಿಂತ ಶೇ 52.3ರಷ್ಟು ಹೆಚ್ಚಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಜನರ ಸಂಖ್ಯೆ ಇನ್ನೂ ಹೆಚ್ಚಿದೆ. ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂಗಳು ಈ ಮಾಹಿತಿ ಒದಗಿಸಿವೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
ಹಬ್ಬಗಳು ಆರಂಭವಾದಾಗಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಶೇ 10-15 ಪ್ರಮಾಣ ಹೆಚ್ಚಾಗಿರುವುದಾಗಿ ಎಲ್ಲಾ ವಲಯಗಳಲ್ಲಿನ ಸಮೀಕ್ಷೆ ತಿಳಿಸಿದೆ ಎಂದು ಫಾನಾ ಅಧ್ಯಕ್ಷ ಪ್ರಸನ್ನ ಎಚ್.ಎಂ, 'ಡೆಕ್ಕನ್ ಹೆರಾಲ್ಡ್'ಗೆ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಿಗೆ ಸೋಂಕಿನಿಂದ ದಾಖಲಾಗುತ್ತಿರುವವರ ಪ್ರಮಾಣ ಶೇ 45ರಷ್ಟು ಏರಿಕೆಯಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶತಜ್ಞ ಡಾ. ಸಚಿನ್ ಡಿ ತಿಳಿಸಿದ್ದಾರೆ.
'ಜುಲೈ ಮಧ್ಯದಿಂದ ಆಗಸ್ಟ್ ಅಂತ್ಯದವರೆಗೆ ನಮ್ಮ ಆಸ್ಪತ್ರೆಯಲ್ಲಿ ಪ್ರತಿದಿನ 8ರಿಂದ 12 ರೋಗಿಗಳು ದಾಖಲಾಗಿದ್ದಾರೆ. ಈ ಸಂಖ್ಯೆ ದೊಡ್ಡದು ಎಂದು ಸದ್ಯ ಅನಿಸದೇ ಇರಬಹುದು. ಆದರೆ ಇದು ಎಚ್ಚರಿಕೆ ವಹಿಸಬೇಕಾದ ಸಂಕೇತ' ಎಂದು ಅವರು ಹೇಳಿದರು.
ಆಸ್ಪತ್ರೆಗೆ ಹೊಸದಾಗಿ ದಾಖಲಾಗುತ್ತಿರುವ ಶೇ 80ರಷ್ಟು ಜನರಲ್ಲಿ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳಿವೆ. ಶೇ 15ರಷ್ಟು ಮಂದಿಗೆ ಮಧ್ಯಮ ರೋಗಲಕ್ಷಣಗಳಿವೆ. ಶೇ 5ರಷ್ಟು ಜನರಿಗೆ ಐಸಿಯು ಆರೈಕೆ ಅಗತ್ಯವಿದೆ ಎಂದು ವಿವರಣೆ ನೀಡಿದ್ದಾರೆ.

ಸದ್ಯ ಆಸ್ಪತ್ರೆಗೆ ದಾಖಲಾಗುತ್ತಿರುವವರಲ್ಲಿ ಇತರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಹಿರಿಯ ನಾಗರಿಕರು ಹೆಚ್ಚಾಗಿದ್ದಾರೆ ಎನ್ನಲಾಗಿದೆ.
ಭಾಗಶಃ ಅಥವಾ ಸಂಪೂರ್ಣವಾಗಿ ಲಸಿಕೆ ಪಡೆದುಕೊಂಡ ವ್ಯಕ್ತಿಗಳು ಕೂಡ ಮರುಸೋಂಕಿಗೆ ತುತ್ತಾಗುತ್ತಿರುವುದು ಕಂಡುಬಂದಿದೆ. ಸಂಪೂರ್ಣ ಲಸಿಕೆ ಪಡೆದುಕೊಂಡ ಹೆಚ್ಚಿನ ಹಿರಿಯ ನಾಗರಿಕರು ಮತ್ತೆ ಸೋಂಕಿಗೆ ತುತ್ತಾಗಿದ್ದಾರೆ. ಅವರೆಲ್ಲ ಮೇ ತಿಂಗಳಿನಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡವರಾಗಿದ್ದಾರೆ.
ಮಳೆಗಾಲವೂ ಆದ್ದರಿಂದ ಸೋಂಕಿನ ಹರಡುವಿಕೆಗೆ ಪ್ರಚೋದನೆ ನೀಡಿರುತ್ತದೆ. ಇದರೊಂದಿಗೆ ಹಬ್ಬದ ಸಮಯದಲ್ಲಿ ಹೆಚ್ಚು ಜನರು ಒಂದೆಡೆ ಸೇರಿಸುತ್ತಿರುವುದು ಇದಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜನರು ಮೈಮರೆತು ಕೊರೊನಾ ನಿಯಮಗಳನ್ನು ಪಾಲಿಸದೇ ಇದ್ದರೆ ಆಗುವ ಸಮಸ್ಯೆಯನ್ನು ಇದು ಪ್ರತಿಬಿಂಬಿಸುತ್ತಿದೆ ಎಂದು ವೈದ್ಯ ಸಚಿನ್ ಎಚ್ಚರಿಕೆ ರವಾನಿಸಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು:
ಭಾನುವಾರ ಕರ್ನಾಟಕದಲ್ಲಿ 803 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 802 ಸೋಂಕಿತರು ಗುಣಮುಖರಾಗಿದ್ದಾರೆ. 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೂ 37504 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2961735ಕ್ಕೆ ಏರಿಕೆಯಾಗಿದೆ. ಒಟ್ಟು 2907548 ಸೋಂಕಿತರು ಗುಣಮುಖರಾಗಿದ್ದು. 16656 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.











Click it and Unblock the Notifications