ಹಿರಿಯ ರಂಗ ಸಂಘಟಕ, ಕಲಾ ಪೋಷಕ ಡಿಕೆ ಚೌಟ ನಿಧನ
ಬೆಂಗಳೂರು, ಜೂನ್ 19: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ರಂಗ ಸಂಘಟಕ, ಕಲಾ ಪೋಷಕ ಡಿಕೆ ಚೌಟ ಅವರು ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಜಯದೇವ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಿಕೆ ಚೌಟ ಅವರು 1938ರ ಜೂನ್ 1ರಂದು ಮಂಜೇಶ್ವರ ಬಳಿಯ ಮಿಯಪ್ಪಾಡಿನಲ್ಲಿ ಜನಿಸಿದ್ದರು. ಬಾಂಬೆ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿದ್ದರು.
ಕೆಲ ಕಾಲ ಲಂಡನ್ ಹಾಗೂ ನೈಜೀರಿಯಾದಲ್ಲಿ ಕೆಲಸ ಮಾಡಿದ್ದರು. ನಂತರ ಬೆಂಗಳೂರಿಗೆ ಬಂದು ಕೈಗಾರಿಕೋದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು.
ಮಿತ್ತಾಬೈಲು ಯಮುನಕ್ಕ, ಉರಿ ಸ್ನಾಯ ಮಾಯೆಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಲಬ್ಯವಾಗಿತ್ತು. ಅವರು ರಂಗ ಸಂಘಟಕರಾಗಿಯೂ ಕಾರ್ಯ ಇರ್ವಹಿಸಿದ್ದರು. ಕರಿಯವಜ್ಜೇರೆನ ಕತೆಕುಲು ನಾಟಕಕ್ಕೆ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಡಿಕೆ ಚೌಟ ಅವರ ನಿಧನಕ್ಕೆ ಸಚಿವ ಕೃಷ್ಣಬೈರೇಗೌಡ ಸಂತಾಪ ಸೂಚಿಸಿದ್ದಾರೆ. ಡಿ ಕೆ ಚೌಟ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು. ಅವರು ಚಿತ್ರಕಲಾ ಪರಿಷತ್ತಿನ ಕಾರ್ಯದರ್ಶಿಯಾಗಿ, ರಂಗ ನಿರಂತರದ ಪೋಷಕರಾಗಿ ,ನಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವ ಮೂಲಕ ಆ ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದರು .
ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯಲ್ಲಿ ಡಿ ಕೆ ಚೌಟ ಅವರ ಪಾತ್ರ ಬಹಳ ದೊಡ್ಡದು. ಚಿತ್ರಸಂತೆ ಮೂಲಕ ಅವರು ರಾಷ್ಟ್ರಮಟ್ಟದಲ್ಲಿ ಚಿತ್ರಕಲಾ ಪರಿಷತ್ತು ಖ್ಯಾತಿ ಪಡೆಯಲು ಕಾರಣರಾದರು . ದೊಡ್ಡ ಮಟ್ಟದಲ್ಲಿ ಕಲಾವಿದರಿಗೆ ನೆರವು ನೀಡುತ್ತಿದ್ದ ಡಿ ಕೆ ಚೌಟ ಸ್ವತಃ ಬರಹಗಾರರಾಗಿ ಅನೇಕ ಉತ್ತಮ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಟ್ಟಿದ್ದಾರೆ.
ತುಳು ಸಾಹಿತ್ಯಕ್ಕೆ ಅವರ ಕೊಡುಗೆ ದೊಡ್ಡದು . ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಸನ್ಮಾನಗಳಿಗೆ ಅವರು ಪಾತ್ರರಾಗಿದ್ದರು . ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ದೊಡ್ಡ ನಷ್ಟ ಅನುಭವಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ .