ಬೆಳ್ಳಂಬೆಳಗ್ಗೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಬೆಂಗಳೂರು, ಡಿಸೆಂಬರ್ 27: ಬುಧವಾರ ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಈ ಸರಣಿ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ದುರ್ಗಾಂಬಾ ಬಸ್ ಚಾಲಕ ಅಪಘಾತವನ್ನು ಕಂಡು ಬಸ್ಅನ್ನು ನಿಲ್ಲಿಸಿದ್ದಾರೆ. ಈ ವೇಳೆ ದುರ್ಗಾಂಬಾ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ದುರ್ಗಾಂಬಾ ಬಸ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸರಣಿ ಬಸ್ ಅಪಘಾತದಲ್ಲಿ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಏಳು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಮೂರು ಬಸ್ಗಳು ನುಜ್ಜುಗುಜ್ಜಾಗಿವೆ. ಸರಣಿ ಅಪಘಾತದಿಂದ ನೆಲಮಂಗಲದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications