ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ 2 ನೇ ಬಾರಿಯೂ ವಜಾ
ಬೆಂಗಳೂರು, ಮೇ 30 : ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಫೆಬ್ರವರಿಯಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬುಧವಾರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಬಿ.ಪರಮೇಶ್ವರ ಪ್ರಸನ್ನ ಅವರು ವಜಾಗೊಳಿಸಿದರು. ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಂ ಸುಂದರ್ ಅವರು ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು.

ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಆರೋಪಿಯಾಗಿದ್ದು 99 ದಿನಗಳಿಂದ ಜೈಲಿನಲ್ಲಿದ್ದಾರೆ. ಹಿಂದೆ ಸೆಷನ್ಸ್ ಕೋರ್ಟ್, ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದವು.
ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿದ್ದಾರೆ. 600 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಆರೋಪಿಗಳಾಗಿದ್ದಾರೆ.
ಎಸ್ಪಿಪಿ ಹೇಳಿದ್ದೇನು? : ನ್ಯಾಯಾಲಯದ ಆದೇಶ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ್ ಸುಂದರ್ ಅವರು, 'ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಜಾಮೀನು ನೀಡಬಹುದು ಎಂದು ನಲಪಾಡ್ ಪರವಾಗಿ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ' ಎಂದರು.
'ಇದು ಭಯ ಹುಟ್ಟಿಸುವ ಪ್ರಕರಣವಾಗಿದೆ. ಆರೋಪಿ ಪ್ರಭಾವಿಯಾಗಿದ್ದು, ಹೊರ ಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಾದ ಮಂಡನೆ ಮಾಡಲಾಗಿತ್ತು. ವಾದಕ್ಕೆ ಮನ್ನಣೆ ನೀಡಿದ ಕೋರ್ಟ್, ಅರ್ಜಿ ತಿರಸ್ಕರಿಸಿದೆ' ಎಂದು ಹೇಳಿದರು.












Click it and Unblock the Notifications