ನ.24ರವರೆಗೆ ಧರಣಿ ವಿಸ್ತರಿಸಿದ ಯಡಿಯೂರಪ್ಪ
ಬೆಂಗಳೂರು, ನ.5 : ಶಾದಿಭಾಗ್ಯ ಯೋಜನೆ ವಿಸ್ತರಿಸರಣೆಗೆ ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರು ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿಯನ್ನು ನ.23 ರವರೆಗೆ ಮುಂದುವರೆಸುವುದಾಗಿ ಘೋಷಿಸಿದ್ದಾರೆ.
ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿಯೇ ಧರಣಿ ಮುಂದುವರೆಸಿ, ನ. 24 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು, ಧರಣಿ ಅಂತ್ಯಗೊಳಿಸಲು ಯಡಿಯೂರಪ್ಪ ನಿರ್ಧರಿಸಿದ್ದಾರೆ. ನಂತರ ನ.25ರಂದು ಬೆಳಗಾವಿಯಲ್ಲಿ ಆರಂಭವಾಗ ಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಲು ತೀರ್ಮಾನ ಕೈಗೊಂಡಿದ್ದಾರೆ.

ಯಡಿಯೂರಪ್ಪ ನಡೆಸುತ್ತಿರುವ ಆಹೋರಾತ್ರಿ ಧರಣಿ ಮಂಗಳವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ಧರಣಿ ಸ್ಥಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಧರಣಿ ವಿಸ್ತರಿಸಿರುವುದಾಗಿ ಘೋಷಿಸಿದರು ಮತ್ತು ಮಂಗಳವಾರ ನಡೆಸಬೇಕಿದ್ದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಾಗೂ ಚಾಮರಾಜನಗರದಿಂದ ಕೈಗೊಳ್ಳಬೇಕಿದ್ದ ರಥಯಾತ್ರೆಯನ್ನೂ ಸದ್ಯ ಸ್ಥಗಿತಗೊಳಿಸಲಾಗಿದೆ ಎಂದರು.
ಆರು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸ್ಪಂದನೆ ತೋರದ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರ ವಿರುದ್ಧ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರದ ಯೋಜನೆಗಳು ಈ ಸಮಾಜವನ್ನು ವಿಭಜಿಸುವ ಕೆಲಸ ಮಾಡಬಾರದು ಎಂಬ ಕಾರಣಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಯಡಿಯೂರಪ್ಪ ಏನು ಮಾಡುತ್ತಾರೆ ಎಂಬ ಧಾಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.
ನಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರೆಸುತ್ತೇವೆ. ವಿಧಾನಮಂಡಲದ ಅಧಿವೇಶನದ ಸಂದರ್ಭ ಸದನದ ಒಳಗೆ ಧರಣಿ ನಡೆಸಲು ಅವಕಾಶ ನೀಡದಿದ್ದಲ್ಲಿ, ಸದನದ ಹೊರಗೆ ಧರಣಿ ನಡೆಸುತ್ತೇವೆ. ಅಧಿವೇಶನ ಮುಗಿದ ನಂತರ ಮತ್ತೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಮುಂದುವರೆಸುತ್ತೇನೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಶಾದಿಭಾಗ್ಯ ಯೋಜನೆಯನ್ನು ಪ್ರಸಕ್ತ ಹಣಕಾಸು ವರ್ಷದಿಂದಲೇ ಎಲ್ಲ ವರ್ಗಗಳಿಗೂ ವಿಸ್ತರಿಸಲು ಸಾಧ್ಯವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಭಂಡತನದ ಮಾತು. ಒಂದು ಯೋಜನೆಯನ್ನು ಈ ವರ್ಷ ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎನ್ನುವವರು ಮುಖ್ಯಮಂತ್ರಿ ಸ್ಥಾನದಲ್ಲಿ ಹೇಗೆ ಮುಂದುವರೆಯುತ್ತಾರೆ? ಎಂದು ಪ್ರಶ್ನಿಸಿದರು.












Click it and Unblock the Notifications