ಶಿವಾಜಿನಗರ ಪೊಲೀಸ್ ಠಾಣೆ ಎಎಸ್ಐ ಆತ್ಮಹತ್ಯೆಗೆ ಶರಣು
ಬೆಂಗಳೂರು, ಜನವರಿ 27 : ಸಹಾಯಕ ಸಬ್ ಇನ್ಸ್ಪೆಕ್ಟರ್ ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಡಿ.ರಾಮಸ್ವಾಮಪ್ಪ (57) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು.
ಅನಾರೋಗ್ಯದಿಂದ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ತಿಂಗಳುಗಳಿಂದ ಅವರು ರಕ್ತದೊತ್ತಡ, ಮಧುಮೇಹ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು.

ರಾಮಸ್ವಾಮಪ್ಪ ಅವರು ಶಿವಾಜಿನಗರದಲ್ಲಿರುವ ಪೊಲೀಸ್ ವಸತಿಗೃಹದಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಂದು ತಿಂಗಳಿಗೂ ಹೆಚ್ಚು ಕಾಲ ರಜೆಯಲ್ಲಿದ್ದ ಅವರು, ಚಿಕಿತ್ಸೆಗಾಗಿ 15 ದಿನ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಅವರು ಮನೆಗೆ ಮರಳಿದ್ದರು. ಮಕ್ಕಳಿಬ್ಬರು ಕೆಲಸದ ನಿಮಿತ್ತ ಹೈದರಾಬಾದ್ಗೆ ಶುಕ್ರವಾರ ತೆರಳಿದ್ದರು.
ಪತ್ನಿ ಮುನಿರತ್ನಮ್ಮ ಅವರನ್ನು ಜ್ಯೂಸ್ ತರಲು ಕಳುಹಿಸಿದ ರಾಮಸ್ವಾಮಪ್ಪ ಅವರು ಪತ್ನಿ ಮನೆಗೆ ವಾಪಸ್ ಆಗುವುದರೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಾಜಿನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.












Click it and Unblock the Notifications