ಶಿವಾಜಿನಗರ ಚುನಾವಣೆ; ಕಾಂಗ್ರೆಸ್ನಿಂದ ಮೂವರು ಉಚ್ಚಾಟನೆ
ಬೆಂಗಳೂರು, ನವೆಂಬರ್ 28 : ಶಿವಾಜಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದ ಮೂವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದೆ.
ಕೆಪಿಸಿಸಿ ಕಾರ್ಯದರ್ಶಿ ಹಾಜಿ ಷಫಿಉಲ್ಲ ಈ ಕುರಿತು ಆದೇಶ ಹೊರಡಿಸಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿಯಿಂದ ಎಂ. ಸರವಣ ಕಣದಲ್ಲಿದ್ದಾರೆ. ಜೆಡಿಎಸ್ನಿಂದ ತನ್ವೀರ್ ಅಹಮದ್ ಅಭ್ಯರ್ಥಿಯಾಗಿದ್ದಾರೆ.
ಜಯಮಹಲ್ ವಾರ್ಡ್ ಬಿಬಿಎಂಪಿ ಸದಸ್ಯ ಎಂ. ಕೆ. ಗುಣಶೇಖರ್, ರಾಮಸ್ವಾಮಿಪಾಳ್ಯ ಬಿಬಿಎಂಪಿ ಸದಸ್ಯ ನೇತ್ರಾವತಿ ಕೃಷ್ಣೇಗೌಡ, ಸಂಪಂಗಿರಾಮನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೃಷ್ಣೇಗೌಡರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಮೂವರು ನಾಯಕರು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರವಾಗಿ ಕೆಲಸ ಮಾಡದೇ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿದ್ದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಕೆಪಿಸಿಸಿಗೆ ಫೋಟೋಗಳ ಸಮೇತ ದೂರು ಬಂದಿತ್ತು. ಆದ್ದರಿಂದ, ಎಲ್ಲರನ್ನೂ ಉಚ್ಚಾಟನೆ ಮಾಡಲಾಗಿದೆ.
2018ರ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಲ್ಲಿ ರೋಷನ್ ಬೇಗ್ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು. ಆದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅವರು ಅನರ್ಹರಾಗಿದ್ದಾರೆ. ಈಗ ಉಪ ಚುನಾವಣೆ ಎದುರಾಗಿದ್ದು ಅವರು ಬಿಜೆಪಿ ಸೇರದಿದ್ದರೂ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ.
ರೋಷನ್ ಬೇಗ್ ಬೆಂಬಲಿಸುವ ಬಿಬಿಎಂಪಿ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿ ಬದಲು ಬಿಜೆಪಿ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ದರಿಂದ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತಿದೆ.
ಉಪ ಚುನಾವಣೆಯಲ್ಲಿ ಬಿಜೆಪಿ ಎಂ. ಸರವಣ ಎಂಬ ಹೊಸಬರಿಗೆ ಟಿಕೆಟ್ ನೀಡಿದೆ. ಹಲವು ವರ್ಷ ಕಾಂಗ್ರೆಸ್ನಲ್ಲಿದ್ದ ಸರವಣ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿ.9ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications