ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು, ಡಿ.14: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.
ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಳಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ. ಇವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಮತ್ತೊಮ್ಮೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿದೆ.
ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ಪಿ.ಎಸ್ ವಸ್ತ್ರದ್ ನೇಮಕ
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಸಾಮಾನ್ಯ ಜಾಮೀನು ನೀಡುವಂತೆ ಮುರುಘಾ ಶರಣರು ಅರ್ಜಿಯ್ಲಿ ಕೋರಿದ್ದಾರೆ. ಈ ಹಿಂದೆ ಸೆಪ್ಟೆಂಬರ್ 23, 2022 ರಂದು ಚಿತ್ರದುರ್ಗದ ವಿಚಾರಣಾ ನ್ಯಾಯಾಲಯವು ಚಾರ್ಜ್ ಶೀಟ್ ಸಲ್ಲಿಸುವ ಮೊದಲು ಜಾಮೀನು ತಿರಸ್ಕರಿಸಿತ್ತು.
ಅರ್ಜಿದಾರರ ಸೆಪ್ಟೆಂಬರ್ 2,2022 ರ ಅರ್ಜಿಯಲ್ಲಿ, ಸಂತ್ರಸ್ತರಲ್ಲಿ ಒಬ್ಬರು ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ನಿರಾಕರಿಸಿದ್ದಾರೆ. ಆದ್ದರಿಂದ ಸಂತ್ರಸ್ತೆಯ ಅಸಹಕಾರವು ಪ್ರಕರಣಕ್ಕೆ ಮಾರಕವಾಗುತ್ತದೆ. ಹೀಗಾಗಿ ವಿಚಾರಣಾ ನ್ಯಾಯಾಲಯವು ನಿಯಮಿತ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ತಿಳಿಸಿದ್ದರು.
ಜುಲೈ 25 ರಂದು ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಬೆಂಗಳೂರು ನಗರದ ಪೊಲೀಸ್ ಠಾಣೆಯಿಂದ ಹೊರಗೆ ಕರೆದೊಯ್ದ ಒಂದು ತಿಂಗಳ ನಂತರ ಆಗಸ್ಟ್ 26 ರಂದು ತನ್ನ ವಿರುದ್ಧ ದೂರು ದಾಖಲಿಸಲಾಗಿದೆ. ಇದರಿಂದ ಇದು ಯೋಜಿತ ಕೆಲಸ ಎಂಬುದು ತೋರಿಸುತ್ತದೆ. ತನಗೆ ಸಂಬಂಧಪಟ್ಟಂತೆ ತನಿಖೆಯು ಬಹುತೇಕ ಮುಗಿದಿದೆ ಮತ್ತು ತಾನು ನ್ಯಾಯಾಲಯದ ಸಾಕ್ಷ್ಯಗಳನ್ನು ಹಾಳು ಮಾಡುವುದಿಲ್ಲ ಮತ್ತು ವಿಚಾರಣೆಗೆ ಯಾವಾಗಲು ಹಾಜರಾಗುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.
ಇತ್ತ, ಮಂಗಳವಾರವೇ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಟ್ರಸ್ಟಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ದೃಷ್ಟಿಯಿಂದ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ. ಭಾರತ ಸಂವಿಧಾನದ ಅನುಚ್ಛೇದ 162 ರನ್ವಯ ಸರ್ಕಾರವು ಸದರಿ ಸಂಸ್ಥೆಗೆ ಆಡಳಿತಾಧಿಕಾರಿಯನ್ನು ನೇಮಿಸಬಹುದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.