ರಾಜ್ಯ ರಾಜಕಾರಣದಿಂದ ಶೋಭಾಗೆ ಮುಕ್ತಿ?ಲೋಕಸಭೆಗೆ ಬೆಂಗಳೂರಿಂದ ಸ್ಪರ್ಧೆ?
Recommended Video

ಬೆಂಗಳೂರು, ನವೆಂಬರ್ 22: ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದ ಸಂಸದೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ರಾಜಕಾರಣದಿಂದ ಮುಕ್ತಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಅದಕ್ಕೆ ಪೂರಕ ಎಂಬತೆ ಇತ್ತೀಚಿನ ದಿನಗಳಲ್ಲಿ ಅವರು ತಮ್ಮ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟು ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ!
ಲೋಕಸಭಾ ಚುನಾವಣೆಗಾಗಿ ಬುಧವಾರ ಬಿಜೆಪಿ ಬಿಡುಗಡೆ ಮಾಡಿದ ಸಂಚಾಲಕರ ಪಟ್ಟಿಯಲ್ಲೂ ಶೋಭಾ ಕರಂದ್ಲಾಜೆ ಅವರ ಹೆಸರಿಲ್ಲ! ರಾಜ್ಯ ಬಿಜೆಪಿ ಪ್ರಧಾನಿ ಕಾರ್ಯದರ್ಶಿಯಾಗಿದ್ದರೂ ಅವರಿಗೆ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿಲ್ಲ.
ಅವರನ್ನು ಲೋಕಸಭಾ ಚುನಾವಣೆಯತ್ತಲೇ ಹೆಚ್ಚು ಗಮನ ಹರಿಸುವಂತೆ ಬಿಜೆಪಿ ಹೈಕಮಾಂಡ್ ಹೇಳಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ರಾಜ್ಯ ರಾಜಕಾರಣದಿಂದ ದೂರವುಳಿದಿದ್ದಾರೆ.

ಬೆಂಗಳೂರು ಉತ್ತರದಿಂದ ಸ್ಪರ್ಧೆ?
ಪ್ರಸ್ತುತ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರನ್ನು 2019 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಲಿದೆ ಎಂಬ ಮಾತು ಕೇಳಿಬರುತ್ತಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಸ್ತುತ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸಂಸದರಾಗಿರುವ ಸದಾನಂದ ಗೌಡ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಂಚಾಲಕರ ಪಟ್ಟಿಯಲ್ಲಿ ಹೆಸರಿಲ್ಲ!
ಬುಧವಾರ ಬಿಡುಗಡೆಯಾದ ಸಂಚಾಲಕರ ಪಟ್ಟಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಪ್ರಭಾವೀ ಮತ್ತು ಅನುಭವಿಗಳ ಹೆಸರನ್ನು ಸೇರಿಸಲಾಗಿದ್ದು, ಇದರಲ್ಲಿ ಶೋಭಾ ಕರಂದ್ಲಾಜೆ ಅವರ ಹೆಸರಿಲ್ಲ. ಅಂದರೆ ಶೋಭಾ ಕರಂದ್ಲಾಜೆ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್ ಕಣಕ್ಕಿಳಿಸುವುದು ಬಹುತೇಕ ಖಚಿತವಾದಂತಾಗಿದೆ.

ಊಹಾಪೋಹಗಳಿಗೆ ತೆರೆ?
ಶೋಭಾ ಕರಂದ್ಲಾಜೆ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸೋಲ್ಲ ಎಂಬ ವದಂತಿ ಇತ್ತೀಚೆಗೆ ಹಬ್ಬಿತ್ತು. ಅವರು ಇತ್ತೀಚೆಗೆ ರಾಜಕೀಯದಲ್ಲಿ ಸಕ್ರಿಯರಾಗದಿರುವುದು ಮತ್ತು ಹೆಚ್ಚಾಗಿ ಮಾಧ್ಯಮಗಳಲ್ಲೂ ಕಾಣಿಸಿಕೊಳ್ಳದಿರುವುದು ಈ ಊಹೆಗೆ ಪುಷ್ಠಿ ನೀಡಿತ್ತು. ಆದರೆ ಅವರು ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಆದ್ದರಿಂದಲೇ ರಾಜ್ಯ ರಾಜಕಾರಣದಿಂದ ದೂರವುಳಿದಿದ್ದಾರೆ ಎನ್ನಲಾಗಿದೆ.

ಲೋಕಸಭೆಗೆ ಸ್ಪರ್ಧಿಸಲು ಶೋಭಾ ಅವರಿಗೇ ಇಷ್ಟವಿಲ್ಲ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದುಕೊಂಡಿದ್ದೆ, ಆದರೆ ವರಿಷ್ಟರು ಈ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸೂಚನೆ ನೀಡಿರುವುದರಿಂದ ಈಗಲೇ ಯಾವುದೇ ನಿರ್ಧಾರ ಪ್ರಕಟಿಸುವುದಿಲ್ಲ ಎಂದು ಕಳೆದ ತಿಂಗಳಷ್ಟೇ ಶೋಭಾ ಕರಂದ್ಲಾಜೆ ಹೇಳಿದ್ದರು.












Click it and Unblock the Notifications