ಪಿಯುಸಿ ಫಲಿತಾಂಶ ಕುಸಿತ, ಶಿಕ್ಷಣ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರು, ಜುಲೈ 15: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ, ಇದಕ್ಕೆ ಉಪನ್ಯಾಸಕರ ಕೊರತೆ ಪ್ರಮುಖ ಕಾರಣ ಎಂದು ವರದಿಯಾಗಿತ್ತು. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ''ಇದರ ಹೊಣೆ ಸುರೇಶ್ ಕುಮಾರ್ ವಹಿಸಿಕೊಳ್ಳಬೇಕು'' ಎಂದು ಟ್ವೀಟ್ ಮಾಡಿದ್ದಾರೆ.
ಜುಲೈ 14 ರಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ವಿಜಯಪುರ ಜಿಲ್ಲೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷದ 14ನೇ ಸ್ಥಾನದಲ್ಲಿ ವಿಜಯಪುರ ಈ ಸಲ ಕೊನೆಯ ಸ್ಥಾನಕ್ಕೆ ಕುಸಿದಿರುವ ಬಗ್ಗೆ ಟೀಕೆಯೂ ವ್ಯಕ್ತವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್ ರೆಡ್ಡಿ 'ಶಿಕ್ಷಕರ ಕೊರತೆಯಿಂದ ಜಿಲ್ಲೆಯಲ್ಲಿ ಕಡಿಮೆ ಫಲಿತಾಂಶ ಬಂದಿದೆ' ಎಂದಿದ್ದಾರೆ. ಇದೇ ವಿಷಯವಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ''ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಸುರೇಶ್ ಕುಮಾರ್ ಅವರೇ ವಹಿಸಬೇಕಾಗುತ್ತದೆ'' ಎಂದು ದೂರಿದ್ದಾರೆ.
ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು.
— Siddaramaiah (@siddaramaiah) July 15, 2020
ಆದರೆ @nimmasuresh ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ.
2/2
'ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್ ಕುಮಾರ್ ಮಧ್ಯೆಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ'' ಎಂದು ಟೀಕಿಸಿದ್ದಾರೆ.
ಇನ್ನುಳಿದಂತೆ ಈ ವರ್ಷ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇದರಲ್ಲಿ ಶೇಕಡಾ 68.24 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ. 55.29 ಬಾಲಕರು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಶೇಕಡಾ 41.27ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ, ವಿಜ್ಞಾನ ವಿಭಾಗದಲ್ಲಿ ಶೇಕಡಾ 76.02ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 65.53ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.












Click it and Unblock the Notifications