ಬಾಯಿ ಬಿಟ್ಟರೆ ಬಣ್ಣಗೇಡು: ಮೋದಿ ಭಾಷಣದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 30: ''ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿ ಭಾಷಣಗಳು'' ಎಂದು ಕರ್ನಾಟಕ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮೋದಿ ಭಾಷಣವನ್ನು ಖಂಡಿಸಿದ್ದಾರೆ.
ಜುಲೈ 1ರಿಂದ ದೇಶದಲ್ಲಿ ಅನ್ಲಾಕ್ 2.0 ಜಾರಿಯಾಗಲಿದೆ. ಈ ಕುರಿತು ಸಂಜೆ 4 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ''ಅನ್ಲಾಕ್ 2 ಸಮಯದಲ್ಲಿ ಸಾರ್ವಜನಿಕರು ಎಚ್ಚರ ವಹಿಸಬೇಕು. ಇಲ್ಲವಾದರೆ ಅಪಾಯ ಖಂಡಿತ. ಸೂಕ್ತ ಸಮಯದಲ್ಲಿ ಸರ್ಕಾರ ಲಾಕ್ಡೌನ್ ಮಾಡಿದ್ದರಿಂದ ದೇಶವೂ ಉತ್ತಮ ಸ್ಥಿತಿಯಲ್ಲಿದೆ'' ಎಂದರು.
ಪ್ರಧಾನಿ ಮೋದಿ ಭಾಷಣ: ಅನ್ಲಾಕ್2ರಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ
ಜೊತೆಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ವರೆಗೂ ವಿಸ್ತರಿಸಿ, ಮುಂದಿನ ಐದು ತಿಂಗಳು ಉಚಿತ ಪಡಿತರ ನೀಡಲಾಗುವುದು ಎಂದು ಘೋಷಿಸಿದರು. ಇದಾದ ಬಳಿಕ ಮೋದಿ ಭಾಷಣದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಟೀಕೆಗಳ ಸುರಿಮಳೆಗೈದಿದ್ದಾರೆ. ಮುಂದೆ ಓದಿ....
ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳು
''ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಠ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು'' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
|
ಸೋನಿಯಾ ಗಾಂಧಿ ಬೇಡಿಕೆ ಇಟ್ಟಿದ್ದರು
''ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು'' ಎಂದಿದ್ದಾರೆ.
ಯೋಧರ ಜೀವ ಮುಖ್ಯವೋ, 56 ಇಂಚಿನ ಪ್ರತಿಷ್ಠೆ ಮುಖ್ಯವೋ?
ದೇಶಾದ್ಯಂತ ಅನ್ನಭಾಗ್ಯ ಜಾರಿಯಾಗಲಿ
''ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ. ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು
ಮೋದಿ ಅವರನ್ನು ಒತ್ತಾಯಿಸುತ್ತೇನೆ'' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೇಂದ್ರದಿಂದ ನೆರವು ಹುಸಿಯಾಗಿದೆ
''ಆಸ್ಪತ್ರೆಗಳು ತುಂಬಿಹೋಗಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಿಎಂ ಕೇರ್ಸ್ ನಿಧಿ ವಿವರ ನೀಡಿ
''ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿ ಅದರ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು'' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ತೈಲ ದರ ಏರಿಕೆಗೆ ಸ್ಪಷ್ಟನೆ ನೀಡಿ
''ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರಧಾನ್ಯ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಮೋದಿ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು'' ಎಂದು ವ್ಯಂಗ್ಯ ಮಾಡಿದ್ದಾರೆ.
ಹುತಾತ್ಮ ಯೋಧರ ಬಲಿದಾನಕ್ಕೆ ಬೆಲೆ ಇಲ್ವಾ?
''ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ದು:ಖತಪ್ತ ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು'' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.