"ಹೇಗಾದರೂ ಮತ್ತೆ ಸಿಎಂ ಆಗೋಕೆ ಸಿದ್ದರಾಮಯ್ಯ ಸರ್ವಪ್ರಯತ್ನ"
ಬೆಂಗಳೂರು, ನವೆಂಬರ್ 06: "ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಗಾದರೂ ಮಾಡಿ ಮತ್ತೊಮ್ಮೆ ಸಿಎಂ ಆಗೋಕೆ ಸರ್ವ ರೀತಿಯಿಂದಲೂ ಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೇಳುವ ನೈತಿಕ ಹಕ್ಕು ಅವರಿಗಿಲ್ಲ" ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ.
"ಕಳೆದ ಕೆಲವು ದಿನಗಳ ನನ್ನ ಪ್ರವಾಸದಲ್ಲಿ ನಾನು ಗಮನಿಸಿದ ಬಹುಮುಖ್ಯ ಅಂಶವೆಂದರೆ, ಬಿಜೆಪಿ ಮೂರು ತಿಂಗಳ ಆಡಳಿತವನ್ನು ನೋಡಿದ ಜನ ತಮ್ಮ ನಿರ್ಧಾರವನ್ನು ಪುನರ್ ವಿಮರ್ಶೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರಬೇಕು ಎಂಬುದು ಬಹುಪಾಲು ಜನರ ಅಭಿಪ್ರಾಯವಾಗಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಕ್ಕೆ ನಳಿನ್ ಪ್ರತಿಕ್ರಿಯಿಸಿದ್ದಾರೆ.
"ಯಡಿಯೂರಪ್ಪ ಸರ್ಕಾರವನ್ನು ಅಸ್ಥಿರಗೊಳಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದು, ಇದು ಎಂದಿಗೂ ಸಾಧ್ಯವಾಗುವುದಿಲ್ಲ, ಆಡಿಯೋ ವಿಡಿಯೋ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರವನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಅಡ್ಡಿ ಆತಂಕವಿಲ್ಲ" ಎಂದು ನಳಿನ್ ಹೇಳಿದ್ದಾರೆ.
"2008 ಮತ್ತು ಈಗ ಎರಡು ಬಾರಿ ಕೂಡ ಬಿ ಎಸ್ ಯಡಿಯೂರಪ್ಪ ಅವರು ಜನಾದೇಶದಿಂದ ಮುಖ್ಯಮಂತ್ರಿಯಾದವರಲ್ಲ. ಆಪರೇಷನ್ ಕಮಲದ ಮೂಲಕ ವಾಮಮಾರ್ಗದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಈ ಆಪರೇಷನ್ ಕಮಲ ಎಂಬ ಅನೈತಿಕ ರಾಜಕಾರಣಕ್ಕೆ ಕೇಂದ್ರ ಸರ್ಕಾರದ ಬೆಂಬಲವೂ ಇದೆ ಎಂದು ಮುಖ್ಯಮಂತ್ರಿಗಳೇ ಕೋರ್ ಕಮಿಟಿ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ನಳಿನ್ ಅವರು ಮಾತನಾಡಿ, ಆಡಿಯೋ ವಿಡಿಯೋ ಕ್ಲಿಪ್ಪಿಂಗ್ ಗಳನ್ನು ರಿಲೀಸ್ ಮಾಡುವುದರಲ್ಲಿ ಸಿದ್ದರಾಮಯ್ಯ ಅವರು ನಿಸ್ಸೀಮರು, ಬಿಜೆಪಿಯಲ್ಲಿ ಒಡಕು ಮೂಡಿಸಲು ಯತ್ನಿಸುವ ಅವರ ಯಾವುದೇ ತಂತ್ರಗಳು ಫಲಿಸುವುದಿಲ್ಲ ಎಂದಿದ್ದಾರೆ.