ಸಿದ್ದು ಸರ್ಕಾರದ ಬಗ್ಗೆ ಸಂತೋಷ್ ಹೆಗ್ಡೆ ಹೇಳಿದ್ದೇನು?
ಬೆಂಗಳೂರು, ಜ.17 : "ಭ್ರಷ್ಟಾಚಾರದ ವಿಷಯದಲ್ಲಿ ಹಿಂದಿನ ಬಿಜೆಪಿ ಸರ್ಕಾರಕ್ಕೂ ಈಗಿನ ಕಾಂಗ್ರೆಸ್ ಸರ್ಕಾರಕ್ಕೂ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ" ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಹಲವು ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಸಂತೋಷ್ ಹೆಗ್ಡೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸಂಪುಟದ ಹಲವು ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಎಂದು ಯಾರ ಹೆಸರನ್ನೂ ಹೇಳದೆ ಪರೋಕ್ಷವಾಗಿ ಚಾಟಿ ಬೀಸಿದರು.

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಸೂಕ್ತ ಸಂದರ್ಭದಲ್ಲಿ ಸರ್ಕಾರ ಒಪ್ಪಿಗೆ ನೀಡದಿರುವುದರಿಂದ 70ಕ್ಕೂ ಹೆಚ್ಚು ಪ್ರಕರಣಗಳು ವಿಳಂಬವಾಗುತ್ತಿವೆ. ಲೋಕಾಯುಕ್ತಕ್ಕೆ ಪರಮಾಧಿಕಾರ ಬೇಕೆಂದು ಕೇಳುತ್ತಿಲ್ಲ. ಆದರೆ, ಭ್ರಷ್ಟಾಚಾರದ ವಿರುದ್ಧ ಪ್ರಬಲವಾಗಿ ಹೋರಾಡಲು ಲೋಕಾಯುಕ್ತವನ್ನು ಇನ್ನಷ್ಟು ಬಲವರ್ಧನೆಗೊಳಿಸಬೇಕು ಎಂದುಗ್ಡೆ ಅಭಿಪ್ರಾಯಪಟ್ಟರು.
ಭಿನ್ನಮತ ಸಾಮಾನ್ಯ : ಆಮ್ ಆದ್ಮಿ ಪಕ್ಷದ ಭಿನ್ನಮತದ ಬಗ್ಗೆ ಮಾತನಾಡಿದ ಸಂತೋಷ್ ಹೆಗ್ಡೆ, ಈಗಷ್ಟೇ ಕಣ್ಣು ಬಿಡುತ್ತಿರುವ ಪಕ್ಷವಾದ್ದರಿಂದ ಭಿನ್ನಮತ ಸಾಮಾನ್ಯ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ. ರಾಜಕೀಯದಲ್ಲಿ ಸಕಾರಾತ್ಮಕ ಹೆಜ್ಜೆ ಇಡುತ್ತಿರುವ ಈ ಪಕ್ಷದ ಬಗ್ಗೆ ಭರವಸೆ ಇಡಬಹುದು ಎಂದರು. [ಅರವಿಂದ್ ಕೇಜ್ರಿವಾಲ್ ಸರ್ವಾಧಿಕಾರಿ : ಬಿನ್ನಿ]
ಆಮ್ ಆದ್ಮಿ ಪಕ್ಷ ಉದಯದ ಬಳಿಕ ದೇಶದ ರಾಜಕೀಯದಲ್ಲಿ ಹೊಸ ಪರ್ವ ಆರಂಭವಾಗಿದೆ. ಜನರಿಗೆ ಒಂದು ಆಶಾಕಿರಣ ಸಿಕ್ಕಿದಂತಾಗಿದೆ. ಆಮ್ ಆದ್ಮಿ ಪಕ್ಷ ಇದನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಹೆಗ್ಡೆ ಸಲಹೆ ನೀಡಿದರು.












Click it and Unblock the Notifications