ಮಳೆಗಾಲದ ಅಧಿವೇಶನ ಹಿನ್ನೆಲೆ: ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಸೆ. 15: ಕೊರೊನಾ ವೈರಸ್, ಲಾಕ್ಡೌನ್ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನವನ್ನು ಕಳೆದ ಮಾರ್ಚ್ ತಿಂಗಳಿನಲ್ಲಿ ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಕೊರೊನಾ ವೈರಸ್ ಆತಂಕದ ಮಧ್ಯೆ ಮಳೆಗಾಲದ ವಿಧಾನ ಮಂಡಲ ಅಧಿವೇಶನ ಇದೇ ಸೆ. 21 ರಿಂದ ಆರಂಭವಾಗಲಿದೆ. ಸಾಲು ಸಾಲು ಹಗರಣಗಳ ಆರೋಪದ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಜೊತೆಗೆ ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಭೂಸುಧಾರಣೆ ಕಾಯ್ದೆಗಳಿಗೆ ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ತರಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಈ ಎಲ್ಲ ವಿಚಾರಗಳ ಕುರಿತು ಅಧಿವೇಶನಕ್ಕೂ ಮೊದಲು ಚರ್ಚೆ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕರೆದಿದ್ದಾರೆ. ನಾಳೆ (ಸೆ.16) ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಲ್ಪಿ ಸಭೆ ಆರಂಭವಾಗಲಿದೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ವಿರೋಧ ಪಕ್ಷದ ಮುಖ್ಯ ಸಚೇತಕ ಇ. ತುಕಾರಾಂ ಮನವಿ ಮಾಡಿದ್ದಾರೆ. ಜೊತೆಗೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಯಾಧ್ಯಕ್ಷರಾದ ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ ಹಾಗೂ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಲಿದ್ದಾರೆ

ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಿ ಅಧಿವೇಶನದಲ್ಲಿ ಮಾತನಾಡುವ ವಿಚಾರಗಳ ಬಗ್ಗೆ ಸಲಹೆಗಳನ್ನು ಕೊಡಬೇಕು. ಜೊತೆಗೆ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಇ. ತುಕಾರಾಂ ತಿಳಿಸಿದ್ದಾರೆ.












Click it and Unblock the Notifications