ಅಮೃತ್ ಪೌಲ್ ಬಂಧನ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಪ್ರತಿಪಕ್ಷಗಳ ಆಗ್ರಹ
ಬೆಂಗಳೂರು: ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿ ಅಮೃತ್ ಪೌಲ್ರನ್ನು ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ ದಿನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಐಡಿ ತನಿಖಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,"ಸಿಐಡಿ ತಂಡದ ನೇತೃತ್ವ ವಹಿಸಿರುವ ದಕ್ಷ ಅಧಿಕಾರಿ, ಪಿ.ಎಸ್.ಸಂಧು, ಎಷ್ಟೇ ರಾಜಕೀಯ ಮತ್ತು ಅಧಿಕಾರಿಶಾಹಿ ಮಟ್ಟದಲ್ಲಿ ಒತ್ತಡ ಎದುರಾದರೂ ಮಣಿಯದೆ ತನಿಖಾ ತಂಡವನ್ನು ಮುನ್ನಡೆಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ" ಎಂದಿದ್ದಾರೆ.
ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರ್ಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್ಪಿನ್ಗಳನ್ನು ಸಿಐಡಿ ಬಂಧಿಸಬೇಕಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥ ಪ್ರಭಾವಿಗಳು ತಪ್ಪಿಸಿಕೊಳ್ಳಲು ಬಿಡಬಾರದು ಎಂದು ಹೇಳಿದ್ದಾರೆ.
ಪಿಎಸ್ಐ ಹಗರಣದಲ್ಲಿ ಒಬ್ಬರು ಮಹಾನ್ ಕಿಂಗ್ಪಿನ್ ಇದ್ದಾರೆ. ಅವರ ಹೆಸರು ಹೇಳಿದರೆ ಸರ್ಕಾರವೇ ಬಿದ್ದು ಹೋಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ, ನಾನು ಹೀಗೆ ಹೇಳಿದಾಗ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡ್ತಾರೆ ಎಂದಿದ್ದರು. ದಾಖಲೆ ಕೊಡಿ ಎಂದಿದ್ದರು. ಈಗ ಅವರು ಏನು ಹೇಳುತ್ತಾರೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
|
ಗೃಹಸಚಿವ ಆರಗ ಜ್ಞಾನೇಂದ್ರ ಈಗೇನು ಹೇಳುತ್ತಾರೆ?
ಎಡಿಜಿಪಿ ಅಮೃತ್ ಪೌಲ್ ಬಂಧನವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, " ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?" ಎಂದು ಪ್ರಶ್ನಿಸಿದ್ದಾರೆ.
"ಪಿಎಸ್ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು." ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
|
ಹಲವು ಸಚಿವರೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದ ಡಿಕೆಶಿ
ಅಮೃತ್ ಪೌಲ್ ಬಂಧನವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು ಹಗರಣದಲ್ಲಿ ಹಲವು ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
"ಪಿಎಸ್ಐ ಹಗರಣದ ಕಿಂಗ್ಪಿನ್ ಎಡಿಜಿಪಿ ಅಮೃತ್ ಪೌಲ್ ಬಂಧನದೊಂದಿಗೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಮೊದಲ ದಿನದಿಂದಲೇ ಈ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕುರಿತು ನಾನು ಹೇಳುತ್ತಲೇ ಬಂದಿದ್ದೇನೆ. ಇದು ಆಡಳಿತದ ವೈಫಲ್ಯವನ್ನು ಹಾಗೂ ಬಿಜೆಪಿಯ ಅಸಮರ್ಥತೆಯನ್ನು ಎತ್ತಿ ತೋರಿಸುತ್ತದೆ." ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆಯನ್ನು ನಿಯಂತ್ರಿಸಲಾಗದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಅವರು. ಪ್ರಕರಣದಲ್ಲಿ ಹಲವು ಬಿಜೆಪಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ತನಿಖೆ ನಡೆಸಿದರೆ ಇನ್ನಷ್ಟು ಸತ್ಯಗಳು ಹೊರಬೀಳುತ್ತವೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ ಎಂದು ಆರೋಪಿಸಿರುವ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಬೊಮ್ಮಾಯಿ ಭ್ರಷ್ಟರನ್ನು ಕಾಪಾಡುವ ಕೆಲಸ ಮಾಡಬೇಡಿ ಎಂದಿದ್ದಾರೆ. ರಾಜ್ಯದ ಜನತೆಗೆ ಬೊಮ್ಮಾಯಿ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರ ಪರಿಚಯವಾಗಿದೆ ಎಂದು ಕಿಡಿ ಕಾರಿದ್ದಾರೆ.

ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಲಿ
ಎಡಿಜಿಪಿ ಅಮೃತ್ ಪೌಲ್ ಬಂಧನವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದು, ಪಿಎಸ್ಐ ಹಗರಣ ನಡೆದ ಸಮಯದಲ್ಲಿ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದರೂ, ಅವರೂ ಇದಕ್ಕೆ ಹೊಣೆ ಎಂದಿದ್ದು, ಎಡಿಜಿಪಿ ಬಂಧನ ಸಾಕಾಗುವುದಿಲ್ಲ, ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಇಲ್ಲಾ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ಸುರ್ಜೇವಾಲಾ ಯುವಕರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿಯ ರಾಜಕೀಯ ಗುರುಗಳ ಸಹಕಾರವಿಲ್ಲದೆ ಪಿಎಸ್ಐ ಹಗರಣ ನಡೆಯಬಹುದೇ? ಎಂದು ಪ್ರಶ್ನಿಸಿರುವ ಅವರು ಇದಕ್ಕೆ ಉತ್ತರ ನೀಡುವಂತೆ ಒತ್ತಾಯಿಸಿದ್ದು. ಹಗರಣದ ಸಮಸಯದಲ್ಲಿ ಬಸವರಾಜ ಬೊಮ್ಮಾಯಿ ಗೃಹಮಂತ್ರಿಯಾಗಿದ್ದರು ಎಂದು ಒತ್ತಿ ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಿಧಾನ ಮಂಡಲದ ದಾರಿ ತಪ್ಪಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಪ್ರಕರಣವನ್ನು ಮುಚ್ಚಿಹಾಕಲು ಯಾರೆಲ್ಲಾ ರಾಜಕಾರಣಿಗಳು ಒತ್ತಡ ಹೇರಿದ್ದರೋ ಅವರೆಲ್ಲರ ಹೆಸರನ್ನು ಆತ್ಮಸಾಕ್ಷಿಯಿಂದ ಬಹಿರಂಗಪಡಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಅವರ ಬಂಧನ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರ ಜತೆ ಸೋಮವಾರ ಮಾತನಾಡಿದ ಶಿವಕುಮಾರ್, 'ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಹಿಂದೆಂದೂ ಕಾಣದಷ್ಟು ಮಟ್ಟಿಗೆ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಭಾರತೀಯ ಪೊಲೀಸ್ ಸೇವೆಗೂ (IPS) ಭ್ರಷ್ಟಾಚಾರ ವಿಸ್ತರಿಸಿದ್ದು, ಇಂದು ಪಿಎಸ್ಐ ನೇಮಕಾತಿಯಲ್ಲಿ ಭಾಗಿಯಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಬಂಧನವಾಗಿದ್ದಾರೆ. ಈ ವಿಚಾರವನ್ನು ಗೃಹ ಸಚಿವರೇ ಒಪ್ಪಿಕೊಂಡಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ, ಎಲ್ಲವೂ ಪಾರದರ್ಶಕವಾಗಿದೆ ಎಂದು ಗೃಹ ಸಚಿವರು ಸದನದ ದಾರಿ ತಪ್ಪಿಸಿದ್ದರು. ಇನ್ನು ನ್ಯಾಯಾಲಯಕ್ಕೆ ಅಧಿಕಾರಿಗಳು ವಿವಿಧ ವರದಿಗಳನ್ನು ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ಈಗಾಗಲೇ ಸಿಐಡಿ ತನಿಖೆ ಮೇಲೆ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಸರಿಯಾಗಿ ತನಿಖೆ ಮಾಡುತ್ತೀರೋ ಅಥವಾ ಬೇರೆಯವರಿಗೆ ತನಿಖೆಯನ್ನು ವಹಿಸಬೇಕೋ ಎಂಬ ಎಚ್ಚರಿಕೆಯನ್ನು ನೀಡಿದೆ. ಇನ್ನು ಹೈಕೋರ್ಟ್ ಈ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಹೇಳಿದೆ. ಇದು ಸಮಾಜಕ್ಕೆ ಭಯೋತ್ಪಾದನೆ ಕೃತ್ಯ ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿರುವುದನ್ನು ಮಾಧ್ಯಮದಲ್ಲಿ ನೋಡಿದ್ದೇವೆ. ಕೇವಲ ಪಿಎಸ್ ಐ ಮಾತ್ರವಲ್ಲ, ಎಲ್ಲ ಇಲಾಖೆಗಳ ನೇಮಕದಲ್ಲಿ ಅಕ್ರಮ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಅಡ್ವೊಕೇಟ್ ಜನರಲ್ ಅವರು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಗೌಪ್ಯವಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವುದೇಕೆ? ಎಂದು ಪ್ರಶ್ನಿಸಿದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ












Click it and Unblock the Notifications