ಹಾಸನ, ಮಂಡ್ಯ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಟ್ರೀಟ್ಮೆಂಟ್?
ಬೆಂಗಳೂರು, ಏಪ್ರಿಲ್ 02: ಹಾಸನ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಖಂಡರು ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿರುವ ಬಗ್ಗೆ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಮುಖಂಡರನ್ನು ಹಾದಿಗೆ ತರಲು ಸಿದ್ದರಾಮಯ್ಯ ಅವರ ಮೊರೆ ಹೋಗಲಾಗಿದೆ.
ಸಿದ್ದರಾಮಯ್ಯ ಅವರನ್ನು ಮಂಡ್ಯ, ಹಾಸನ ಅಖಾಡಕ್ಕೆ ಇಳಿಸಲಾಗುತ್ತಿದ್ದು, ಇಂದು ರಾತ್ರಿ ಅಥವಾ ನಾಳೆ ಸಿದ್ದರಾಮಯ್ಯ ಅವರು ಮಂಡ್ಯ, ಹಾಸನ ಕಾಂಗ್ರೆಸ್ ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.
ಮಂಡ್ಯದಲ್ಲಿ ಕಹಳೆ ಊದಿದ ಸುಮಲತಾಗೆ ಬಿಜೆಪಿ, ಕಾಂಗ್ರೆಸ್ ಜೈಕಾರ
ಮಂಡ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಎಂಟೂ ಕಾಂಗ್ರೆಸ್ ಅಭ್ಯರ್ಥಿಗಳು ಜೆಡಿಎಸ್ ಬೆಂಬಲಕ್ಕೆ ಬರುತ್ತಿಲ್ಲ, ಅಲ್ಲದೆ ಕೆಲವರು ಬಹಿರಂಗವಾಗಿಯೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಇದಕ್ಕಾಗಿಯೇ ಸಿದ್ದರಾಮಯ್ಯ ಅವರು ಮಂಡ್ಯ, ಹಾಸನ ಕಾಂಗ್ರೆಸ್ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಚೆಲುವರಾಯಸ್ವಾಮಿ, ರಮೇಶ್ ಬಂಡಸಿದ್ದೇಗೌಡ, ನರೇಂದ್ರ ಸ್ವಾಮಿ, ಪಿ. ರವಿಕುಮಾರ್, ಮಧು ಮಾದೇಗೌಡ ಇನ್ನೂ ಇತರ ಜಿಲ್ಲಾ ಮುಖಂಡರ ಜೊತೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಚಾಮುಂಡೇಶ್ವರಿಯಲ್ಲೂ ಸಿದ್ರಾಮಣ್ಣ ಪರ ದರ್ಶನ್ ಪ್ರಚಾರ ಮಾಡಿಲ್ವೇ, ಆದ್ರೆ ಏನಾಯ್ತು?
ಕಾಂಗ್ರೆಸ್ ಮುಖಂಡರು ಬೆಂಬಲ ನೀಡದಿದ್ದರೆ ಹಾಸನ ಮತ್ತು ಮಂಡ್ಯ ಕ್ಷೇತ್ರದಲ್ಲಿ ಇಬ್ಬರೂ ಅಭ್ಯರ್ಥಿಗಳಿಗೆ ಗೆಲುವು ಮರೀಚಿಕೆಯಾಗಲಿದೆ. ಹಾಗಾಗಿಯೇ ಕುಮಾರಸ್ವಾಮಿ ಅವರು ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ಕಾರಣ, ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಂಡ್ಯ, ಹಾಸನದ ಭಿನ್ನಾಭಿಪ್ರಾಯ ಶಮನ ಜವಾಬ್ದಾರಿಯನ್ನು ಸಿದ್ದರಾಮಯ್ಯಗೆ ಹೊರಿಸಿದೆ.