ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಬೆಂಗಳೂರು, ಅಕ್ಟೋಬರ್ 10: ವಿಧಾನಸಭೆಯ ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೃತಜ್ಞತೆ ಅರ್ಪಿಸಿದರು.
ಜೊತೆಗೆ ವಿಪಕ್ಷ ನಾಯಕರಾಗಿ ಆಯ್ಕೆಯಾಗುತ್ತಿದ್ದಂತೆಯೇ ಸರ್ಕಾರ ಮತ್ತು ಸ್ಪೀಕರ್ ಅನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಮಾಧ್ಯಮಗಳನ್ನು ಅಧಿವೇಶನದಿಂದ ದೂರ ಇಟ್ಟಿರುವ ಸ್ಪೀಕರ್ ಕ್ರಮವನ್ನು ಬಲವಾಗಿ ಖಂಡಿಸಿದರು. ಪಾರದರ್ಶಕತೆಯ ಬಗ್ಗೆ ಸರ್ಕಾರಕ್ಕೆ ಭಯವೇಕೆ ಎಂದು ಅವರು ಪ್ರಶ್ನಿಸಿದರು.
ವಿಧಾನಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಆಯ್ಕೆ
ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರಕ್ಕೆ ಭಾರೀ ತಲೆನೋವನ್ನುಂಟು ಮಾಡಿದೆ.
ಸೋನಿಯಾ, ರಾಹುಲ್ ಗೆ ಕೃತಜ್ಞತೆ
"ಕರ್ನಾಟಕ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರಿಗೆ ಚಿರಋಣಿಯಾಗಿದ್ದೇನೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆಭಾರಿ ಎಂದ ಸಿದ್ದರಾಮಯ್ಯ
"ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನದಿಂದ ನಿರ್ಗಮಿಸಿದ್ದೇನೆ. ಈ ಜವಾಬ್ದಾರಿ ಕೊಟ್ಟು ಕೆಲಸ ಮಾಡಲು ಅವಕಾಶ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾಗಿರುವ ಸೋನಿಯಾಗಾಂಧಿ ಅವರಿಗೆ ಆಭಾರಿಯಾಗಿದ್ದೇನೆ." ಎಂದು ಸಹ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸದನದಲ್ಲಿ ರಾಜಾಹುಲಿ ಬಿಎಸ್ವೈ ಗೆ ಟಗರು ಸಿದ್ದರಾಮಯ್ಯ ಠಕ್ಕರ್
ಮಾಧ್ಯಮ ನಿಷೇಧಕ್ಕೆ ಕಟು ಟೀಕೆ
ಜೊತೆಗೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗುತ್ತಿದ್ದಂತೆಯೇ ಅಧಿವೇಶನಕ್ಕೆ ಖಾಸಗಿ ಚಾನೆಲ್ ಗಳಿಗೆ ನಿಷೇಧ ಒಡ್ಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ತೀರ್ಮಾನವನ್ನು ಸಿದ್ದರಾಮಯ್ಯ ಕಟುವಾಗಿ ಖಂಡಿಸಿದ್ದಾರೆ.
"ಮಾಧ್ಯಮಗಳು ಅವಕಾಶ ದುರ್ಬಳಕೆ ಮಾಡಿದರೆ ಕ್ರಮ ಕೈಗೊಳ್ಳಿ, ನಿಯಮಗಳನ್ನು ಬಿಗಿಗೊಳಿಸಿ. ಅದನ್ನು ಬಿಟ್ಟು ಟಿವಿ ಚಾನೆಲ್ಗಳ ಕ್ಯಾಮರಾಮ್ಯಾನ್ ಮತ್ತು ಪತ್ರಿಕಾ ಛಾಯಾಗ್ರಾಹಕರ ವಿಧಾನಸಭೆ ಪ್ರವೇಶವನ್ನೇ ನಿರ್ಬಂಧಿಸಿರುವ ಸ್ಪೀಕರ್ ತೀರ್ಮಾನದಿಂದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ. ಪಾರದರ್ಶಕತೆ ಬಗ್ಗೆ ಭೀತಿ ಯಾಕೆ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪರಿಷತ್ ನಾಯಕರಾಗಿ ಎಸ್.ಆರ್.ಪಾಟೀಲ್
ಬುಧವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, ಸಿದ್ದರಾಮಯ್ಯ ಅವರನ್ನು ವಿಧಾನಸಭೆ ವಿರೋಧ ಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿ, ಎಸ್.ಆರ್.ಪಾಟೀಲ್ ಅವರು ವಿಧಾನಪರಿಷತ್ ಪ್ರತಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿ ಘೋಷಣೆ ಹೊರಡಿಸಿದ್ದರು.
ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಪ್ರತಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿರುವುದು ಆಡಳಿತ ಪಕ್ಷಕ್ಕೆ ಭಾರೀ ತಲೆನೋವೆನ್ನಿಸಿದೆ.