ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿದ ಬೊಮ್ಮಾಯಿ ಸರ್ಕಾರ- ಸಿದ್ದರಾಮಯ್ಯ ಕಿಡಿ
ಬೆಂಗಳೂರು ಆಗಸ್ಟ್ 5: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ 'ಹರ್ ಘರ್ ತಿರಂಗ್' ಎಂದು ಹಿಂದಿಯಲ್ಲಿ ಬರೆಯುವ ಮೂಲಕ ಬಸವರಾಜ ಬೊಮ್ಮಾಯಿ ಸರ್ಕಾರ ಕನ್ನಡಕ್ಕೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ. ಕನ್ನಡವನ್ನು ನಿರ್ಲಕ್ಷಿಸಿ ಸರ್ಕಾರಿ ಕಾರ್ಯಕ್ರಮಗಳು ಮತ್ತು ವೆಬ್ಸೈಟ್ಗಳಲ್ಲಿ ಹಿಂದಿ ಬಳಸುತ್ತಿರುವ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರದ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆಗೆ ತ್ರಿವರ್ಣಧ್ವಜದ ಫೋಟೋದೊಂದಿಗೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕೃತ ವೆಬ್ಸೈಟ್ನಲ್ಲಿ 'ಹರ್ ಘರ್ ತಿರಂಗ್' ಎಂದು ಹಿಂದಿಯಲ್ಲಿ ಬರೆದ ಶೀರ್ಷಿಕೆಯನ್ನು ಹಂಚಿಕೊಳ್ಳಲಾಗಿದೆ. ಇದಕ್ಕೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಕನ್ನಡಕ್ಕೆ ಮೊದಲು ಪ್ರಾಶಸ್ತ್ಯ ನೀಡುವ ಬದಲು ಹಿಂದಿಗೆ ನೀಡಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಈ ಮೂಲಕ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡಿದೆ ಎಂದು ಆರೋಪಿಸಿದ್ದಾರೆ. ಬೊಮ್ಮಾಯಿ ಸರ್ಕಾರ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸುತ್ತಿದೆ ಎಂದು ದೂರಿದ್ದಾರೆ. ಇದರೊಂದಿಗೆ ಕೇಂದ್ರ ಬಿಜೆಪಿ ಸರ್ಕಾರವನ್ನು ಮೆಚ್ಚಿಸುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಸುದೀಪ್ ಅಜಯ್ ದೇವಗನ್
ಕೆಲ ದಿನಗಳ ಹಿಂದೆ ಕಿಚ್ಚ ಸುದೀಪ್ ತಮ್ಮ ಸಂದರ್ಶನದಲ್ಲಿ, ಹಿಂದಿ ರಾಷ್ಟ್ರ ಭಾಷೆಯಾಗಿ ಉಳಿದಿಲ್ಲ. ನಾವು ದಕ್ಷಿಣದಿಂದ ಬರ್ತೀವಿ ಅಂದ ಮಾತ್ರಕ್ಕೆ ಪ್ಯಾನ್ ಇಂಡಿಯಾ ಅಂತ ಕರೆಯೋಕೆ ಆರಂಭಿಸಿದರು. ಹಿಂದಿ ಭಾಷೆಯ ಚಿತ್ರಗಳನ್ನ ಪ್ಯಾನ್ ಇಂಡಿಯಾ ಅಂತ ಯಾಕೆ ಕರೆಯಲ್ಲ? ಎಂದು ಪ್ರಶ್ನಿಸಿದ್ದರು. ಅದಲ್ಲದೇ ಪ್ಯಾನ್ ಇಂಡಿಯಾ ಎಂಬ ಆ ಪದವನ್ನು ಡಿಲೀಟ್ ಮಾಡಬೇಕು ಎಂದು ಸುದೀಪ್ ಹೇಳಿದ್ದರು.
ಸುದೀಪ್ ಹೇಳಿಕೆಯನ್ನೇ ಗುರಿಯಾಗಿಸಿಕೊಂಡು ಬುಧವಾರ ಟ್ವೀಟ್ ಮಾಡಿದ ಅಜಯ್ ದೇವಗನ್, ನನ್ನ ಸಹೋದರ ಕಿಚ್ಚ ಸುದೀಪ್ ಅವರೇ, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ, ನಿಮ್ಮ ಮಾತೃ ಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಏಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ಇಂದು ಮತ್ತು ಎಂದೆಂದಿಗೂ ನಮ್ಮ ಮಾತೃ ಭಾಷೆ ಮತ್ತು ರಾಷ್ಟ್ರ ಭಾಷೆ ಆಗಿರುತ್ತದೆ. ಜನ ಗಣ ಮನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.
ಈ ಟ್ವೀಟ್ ಬೆನ್ನಲ್ಲೇ ಅಜಯ್ ದೇವಗನ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದಕ್ಷಿಣ ಭಾರತದ ಚಿತ್ರರಂಗದ ಹಲವರು ಹಿಂದಿ ರಾಷ್ಟ್ರಭಾಷೆಯಲ್ಲ. ನಮ್ಮ ಭಾಷೆ ನಮ್ಮ ಹೆಮ್ಮೆ ಎಂದು ಅಜಯ್ ದೇವಗನ್ ಹೇಳಿಕೆ ಖಂಡಿಸಿದ್ದಾರೆ. ಅದಲ್ಲದೇ ಸುದೀಪ್ ಕೂಡ ಪ್ರತಿಕ್ರಿಯಿಸಿದ್ದು, ನಾನು ಕನ್ನಡದಲ್ಲಿ ಟ್ವೀಟ್ ಮಾಡಿದರೆ ನಿಮಗೆ ಅರ್ಥವಾಗುತ್ತಾ? ನಾನು ಈ ದೇಶದ ಪ್ರತಿ ಭಾಷೆಯನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ ಎಂದು ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದರು.
ಗೃಹ ಸಚಿವ ಅಮಿತ್ ಶಾ ಹೇಳಿಕೆ
ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬೇಕು ಎಂಬ ಹೇಳಿಕೆ ನೀಡಿದ್ದರು. ಆಗ ಕೂಡ ಹಿಂದಿ ಹೇರಿಕೆ ಬಗ್ಗೆ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಅಮಿತ್ ಶಾ ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಹಿಂದಿ, ಇಂಗ್ಲೀಷ್, ತಮಿಳು, ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ ಎಂದಿದ್ದರು.