ಮುಖ್ಯಮಂತ್ರಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ
Recommended Video
ಬೆಂಗಳೂರು, ಆಗಸ್ಟ್ 17: ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಹಾನಿಯಾಗಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೂ ಒಂದು ರೂಪಾಯಿ ಸಹ ಪರಿಹಾರ ಘೋಷಿಸಿಲ್ಲ. ಅಲ್ಲದೆ, ಪರಿಹಾರ ಕೇಳಲು ಹೋದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಇದು ವಿರೋಧಪಕ್ಷಗಳನ್ನು ಕೆರಳಿಸಿದೆ.
ಮಾಜಿ ಮುಖ್ಯಮಂತ್ರಿ ಇದು ಸ್ವಾಭಿಮಾನಿ ಕರ್ನಾಟಕ್ಕೆ ಆಗಿರುವ ಅವಮಾನ ಎಂದೇ ವ್ಯಾಖ್ಯಾನಿಸಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ಮಾತನ್ನಾಡಿದ್ದಾರೆ.
ಈ ಹಿಂದಿನ ಯಾವ ಸರ್ಕಾರಗಳೂ ನೆರೆ ಅಥವಾ ಬರ ಪರಿಸ್ಥಿತಿ ಎದುರಾದಾಗ ರಾಜ್ಯವನ್ನು ನಿರ್ಲಕ್ಷ್ಯ ಮಾಡಿರಲಿಲ್ಲ. ಆದರೆ, ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿದ್ದಲ್ಲದೆ, ಮುಖ್ಯಮಂತ್ರಿಯನ್ನು ಅವಮಾನಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

''ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು'' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಾಗೆಯೇ, ತಾವು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಯೋಜನೆಗಳಿಗೆ ರಾಜ್ಯ ಸರ್ಕಾರವು ಕತ್ತರಿ ಹಾಕಲು ಮುಂದಾಗಿರುವ ಕ್ರಮವನ್ನು ಸಹ ಅವರು ಖಂಡಿಸಿದ್ದಾರೆ. ಈ ನಿರ್ಧಾರ ಒಳ್ಳೆಯದಲ್ಲ. ಇದರ ವಿರುದ್ಧ ಬಡಜನರು ದಂಗೆ ಏಳುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ರವಾನಿಸಿದ್ದಾರೆ.
''ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ.
ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ'' ಎಂದು ಹೇಳಿದ್ದಾರೆ.












Click it and Unblock the Notifications