ತರಾತುರಿಯಲ್ಲಿ ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ, ಏನೇನು ಚರ್ಚೆ?
Recommended Video
ಬೆಂಗಳೂರು, ಸೆಪ್ಟೆಂಬರ್ 18: ಸರ್ಕಾರದ ವಿರುದ್ಧ ಹೋರಾಡಲು ಇಂದು ಸಿಎಲ್ಪಿ ಸಭೆ ಕರೆಯಲಾಗಿದೆ. ಇನ್ನೊಂದೆಡೆ ಪ್ರತಿಪಕ್ಷ ನಾಯಕನ ಸ್ಥಾನ ಗಿಟ್ಟಿಸಲು ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ.
ರಾಜ್ಯದಲ್ಲಿ ನೆರೆ-ಬರ ತೀವ್ರವಾಗಿ ಕಾಡುತ್ತಿದೆ, ಇದರ ನಿರ್ವಹಣೆಯಲ್ಲಿ ರಾಜ್ಯಸ ಸರ್ಕಾರದ ವೈಫಲ್ಯ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮತ್ತು ಬಿಜೆಪಿ ಸರ್ಕಾರದ ದ್ವೇಷದ ರಾಜಕಾರಣದ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸಲು ಬುಧವಾರ(ಸೆ.18)ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಆಯೋಜಿಸಿರುವುದಾಗಿ ತಿಳಿಸಿದ್ದಾರೆ.
ಈ ಸಭೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ನ ಅಷ್ಟೂ ಶಾಸಕರು ನೆರೆ ಹಾಗೂ ಬರ ಸ್ಥಿತಿಯಿಂದ ಸಂಕಷ್ಟಕ್ಕೆ ಒಳಗಾದ ರಾಜ್ಯದ ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲು ಅನುವಾಗುವಂತೆ ಪ್ರತಿಪಕ್ಷ ನಾಯಕನ ಹುದ್ದೆಯೂ ತಮಗೆ ದೊರೆಯಬೇಕು ಎಂಬ ಅಭಿಪ್ರಾಯ ಹೊಂದಿದ್ದಾರೆ.

ವಿಧಾನಮಂಡಲ ಅಧಿವೇಶನ ಸಮಯದಲ್ಲಿ ಸಭೆ ಕರೆಯುವುದು ವಾಡಿಕೆ
ಸಾಮಾನ್ಯವಾಗಿ ವಿಧಾನಮಂಡಲದ ಅಧಿವೇಶನ ನಡೆಯುವ ವೇಳೆ ಕರೆಯುವ ಸಂಪ್ರದಾಯವಿರುವ ಶಾಸಕಾಂಗ ಪಕ್ಷದ ಸಭೆಯನ್ನು ಅಧಿವೇಶನವಿಲ್ಲದ ಸಮಯದಲ್ಲಿ ಸಿದ್ದರಾಮಯ್ಯ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ ಧೋರಣೆ ವಿರುದ್ಧ ಹೋರಾಟ
ಬಿಜೆಪಿ ಸರ್ಕಾರದ ಈ ಧೋರಣೆ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂಬ ಬಗ್ಗೆಯೂ ಚರ್ಚೆಯಾಗಲಿದೆ. ಪ್ರವಾಹ ಹಾಗೂ ಬರ ಪರಿಸ್ಥಿತಿ ಕುರಿತು ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡುವುದು, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟ ಸಂಘಟಿಸುವ ಕುರಿತು ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆಯಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶಾಸಕಾಂಗ ಸಭೆಯಲ್ಲಿ ಸಂಭವನೀಯ ಚರ್ಚೆ
ಈ ಸಭೆಯನ್ನು ಪ್ರವಾಹಪೀಡಿತ ಪ್ರದೇಶಗಳಲ್ಲಿ ಆಗಿರುವ ಹಾನಿ ಮತ್ತು ಸರ್ಕಾರ ಕೈಗೊಂಡಿರುವ ಕ್ರಮ, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಈ ಬಗ್ಗೆ ಸರ್ಕಾರದ ಕ್ರಮ ಮತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವಲ್ಲಿ ಆಗುತ್ತಿರುವ ತಾರತಮ್ಯದ ವಿವರಗಳನ್ನು ಶಾಸಕರಿಂದ ಖುದ್ದಾಗಿ ಪಡೆಯಲು ಆಯೋಜಿಸಲಾಗಿದೆ ಎಂದು ಸಿದ್ದರಾಮಯ್ಯ ಮೂಲಗಳು ತಿಳಿಸಿವೆ.

ಕಾಂಗ್ರೆಸ್ನ ಕೆಲ ನಾಕರಿಂದ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಲಾಬಿ
ಈ ನಡುವೆ ಕಾಂಗ್ರೆಸ್ನ ಕೆಲ ನಾಯಕರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಲಾಬಿ ಕೂಡ ಆರಂಭಿಸಿದ್ದಾರೆ.ವಿಶೇಷವಾಗಿ ಉತ್ತರ ಕರ್ನಾಟಕಕ್ಕೆ ಈ ಸ್ಥಾನ ದೊರೆಯಬೇಕೆಂದು ಎಚ್ಕೆ ಪಾಟೀಲ್ ಅವರು ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದರು. ಈ ಎಲ್ಲದರ ಹಿನ್ನೆಲೆಯಲ್ಲಿ ಶಾಸಕರ ಮೇಲೆ ತಾವು ಹೊಂದಿರುವ ಪ್ರಭಾವವನ್ನು ಹೈಕಮಾಂಡ್ಗೆ ಮನದಟ್ಟು ಮಾಡಿಕೊಡಲು ಈ ಶಾಸಕಾಂಗ ಸಭೆಯನ್ನು ಸಿದ್ದರಾಮಯ್ಯ ಕರೆದಿದ್ದಾರೆ.












Click it and Unblock the Notifications