"ಸಿಗಂದೂರು ದೇಗುಲವನ್ನು ಮುಜರಾಯಿ ವ್ಯಾಪ್ತಿಗೆ ಸೇರಿಸುವುದಿಲ್ಲ"
ಬೆಂಗಳೂರು, ನವೆಂಬರ್ 7: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು, "ಯಾವುದೇ ಕಾರಣಕ್ಕೂ ಮುಜರಾಯಿ ವ್ಯಾಪ್ತಿಗೆ ಸಿಗಂದೂರು ದೇಗುಲವನ್ನು ತರುವುದಿಲ್ಲ" ಎಂದು ಹೇಳಿದ್ದಾರೆ.
ಈಚೆಗೆ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ವಿವಾದ ಉಂಟಾಗಿದ್ದು, ಈ ಸಂಬಂಧ ಸಾಗರದ ಶಾಸಕ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಈಡಿಗ ಸಮುದಾಯದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿತು. ಈ ವೇಳೆ ಮುಖ್ಯಮಂತ್ರಿಗಳು ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ದೇಗುಲದಲ್ಲಿ ಸಂಘರ್ಷ ನಡೆದ ಸಂದರ್ಭ, ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಚರ್ಚೆಗಳು ನಡೆದಿದ್ದವು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು "ಸಿಗಂದೂರು ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೋ, ಬೇಡವೋ ಎಂಬ ಬಗ್ಗೆ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು. ನಂತರ ಸಲಹಾ ಸಮಿತಿಯನ್ನು ರಚಿಸಲಾಗಿತ್ತು. ಸಲಹಾ ಸಮಿತಿ ರಚನೆಗೆ ವಿರೋಧ ಕೇಳಿಬಂದಿತ್ತು.

ನಿಯೋಗವು ದೇವಾಲಯದ ಮೇಲುಸ್ತುವಾರಿ ಸಮಿತಿ ಕುರಿತೂ ಚರ್ಚೆ ನಡೆಸಿದೆ. ಜಿಲ್ಲಾಡಳಿತ ರಚಿಸಿರುವ ಸಲಹಾ ಸಮಿತಿ ಮಾರ್ಪಾಡಿಗೆ ಮನವಿ ಮಾಡಿದೆ. ನಂತರ ಸಲಹಾ ಸಮಿತಿಗೆ ಈಡಿಗ ಸಮುದಾಯದ ರೇಣುಕಾನಂದ ಸ್ವಾಮೀಜಿ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಸಿಎಂ ಸೂಚಿಸಿದರು. ಈಗ ರಚನೆಯಾಗಿರುವ ಸಮಿತಿ ನಾಲ್ಕು ತಿಂಗಳವರೆಗೂ ಮುಂದುವರೆಯುವುದು ಎಂದೂ ತಿಳಿಸಿದ್ದಾರೆ.












Click it and Unblock the Notifications