ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂಸಿ ಮನಗೂಳಿ ವಿಧಿವಶ
ಬೆಂಗಳೂರು, ಜನವರಿ 28: ವಿಜಯಪುರ ಸಿಂದಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರು ಗುರುವಾರ ರಾತ್ರಿ ನಿಧನರಾದರು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 85 ವರ್ಷದ ಮನಗೂಳಿ ಅವರನ್ನು ಜನವರಿ 9ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ 1 ಗಂಟೆಗೆ ಅವರು ಕೊನೆಯುಸಿರೆಳೆದರು.
ಕಫ, ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಾಗಿತ್ತು. 1936ರ ಸೆಪ್ಟೆಂಬರ್ 29ರಂದು ಬಾಗೇವಾಡಿ ತಾಲ್ಲೂಕಿನ ಮನಗೂಳಿಯಲ್ಲಿ ಜನಿಸಿದ್ದ ಅವರ ಪೂರ್ಣ ಹೆಸರು ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ.
ಹತ್ತನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದ ಎಂಸಿ ಮನಗೂಳಿ ಅವರು ಸಿಂದಗಿ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧಿಸಿದ್ದರು. ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎಚ್ಡಿ ದೇವೇಗೌಡ ಅವರ ಸರ್ಕಾರದಲ್ಲಿ 12 ತಿಂಗಳು ಪಂಚಾಯತ್ ರಾಜ್ ಸಚಿವರಾಗಿ ಮತ್ತು 2018ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿದ್ದರು. ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಸಹ ಕಾರ್ಯನಿರ್ವಹಿಸಿದ್ದರು.
ಐವರು ಮಕ್ಕಳು
ಎಂಸಿ ಮನಗೂಳಿ ಅವರ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ಸಿಂದಗಿಯತ್ತ ಸಾಗಿಸಲಾಗುತ್ತಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಾರ್ಥಿವ ಶರೀರವು ಸಿಂದಗಿ ಪಟ್ಟಣದಲ್ಲಿರುವ ಅವರ ನಿವಾಸಕ್ಕೆ ತಲುಪುವ ನಿರೀಕ್ಷೆಯಿದೆ. ಎಂಸಿ ಮನಗೂಳಿ ಅವರು ನಾಲ್ವರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಹಲವು ದಶಕಗಳ ಒಡನಾಡಿ
ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮ ಪ್ರೀತಿ ಕಾಕಾ
ಮಾಜಿ ಸಚಿವರು, ಸಿಂದಗಿಯ ಜೆಡಿಎಸ್ ಶಾಸಕರು ಹಾಗೂ ನಮ್ಮೆಲ್ಲರ ಪ್ರೀತಿಯ ಮನಗೂಳಿ ಕಾಕಾ ಆಗಿದ್ದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನ ತೀವ್ರ ನೋವುಂಟುಮಾಡಿದೆ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯಂತಹ ಹಲವು ರೈತಪರ ಯೋಜನೆಗಳಿಗೆ ಮನಗೂಳಿ ಅವರ ಕೊಡುಗೆ ಅಪಾರ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
Recommended Video
ಪಕ್ಷಕ್ಕೆ ಬಹಳ ನಷ್ಟ
ಮಾಜಿ ಸಚಿವರು, ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಶ್ರೀ ಎಂ.ಸಿ. ಮನಗೂಳಿ ಅವರು ಇಂದು ನಮನ್ನು ಅಗಲಿದ್ದಾರೆ. ಮನಗೂಳಿಯವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಜನತಾದಳದ ಅಧಿಕೃತ ಟ್ವಿಟ್ಟರ್ ಖಾತೆ ಸಂತಾಪ ಸೂಚಿಸಿದೆ.