ಡಿಜಿಟಲ್ ಬ್ಯಾಂಕಿಂಗ್ ವಂಚನೆ ತಡೆಯಲು ಏಕಗವಾಕ್ಷಿ ಪದ್ಧತಿ
ಬೆಂಗಳೂರು, ಸೆಪ್ಟೆಂಬರ್ 10: ಡಿಜಿಟಲ್ ಬ್ಯಾಂಕಿಂಗ್ ವಲಯದಲ್ಲಿ ಹೆಚ್ಚುತ್ತಿರುವ ವಂಚನೆಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.
ಡಿಜಿಟಲ್ ಬ್ಯಾಂಕಿಂಗ್ ಮೋಸ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನಕಲಿ ಕಸ್ಟಮರ್ ಕೇರ್ ಕರೆ ತಡೆಗಟ್ಟಲು ಏಕ ಗವಾಕ್ಷಿ ಪದ್ಧತಿ ತರಲು ಉದ್ದೇಶಿಸಲಾಗಿದೆ. ಇದರ ಮೂಲಕ ಡಿಜಿಟಲ್ ಕ್ಷೇತ್ರದ ವಂಚನೆಯನ್ನು ತಡೆಯಲು ಕ್ರಮ ತೆಗೆದುಕೊಳ್ಳಲಾಗುವುದು. ವಂಚನೆಗೆ ಒಳಗಾದವರು ವಾಟ್ಸಾಪ್ ಸಂದೇಶದ ಮೂಲಕ ದೂರು ದಾಖಲಿಸಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಈ ವ್ಯವಸ್ಥೆಗಾಗಿ ಶೀಘ್ರದಲ್ಲಿಯೇ ಒಂದು ವಾಟ್ಸಾಪ್ ಸಂಖ್ಯೆ ನೀಡಲಾಗುವುದು. ಇದಕ್ಕಾಗಿ ಸಮನ್ವಯ ಸಮಿತಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಈ ಸಮಿತಿಯಿಂದ ಸಲಹೆಗಳನ್ನು ಪಡೆದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಗುವ ಅವ್ಯವಹಾರ, ವಂಚನೆಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳ ಜತೆಗೆ ಅವರು ಗುರುವಾರ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರದವರು, ಮಾಹಿತಿ ತಂತ್ರಜ್ಞಾನ ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಇರುತ್ತಾರೆ ಎಂದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪರಾಧಗಳು ಹೆಚ್ಚುತ್ತಿವೆ. ಜನಸಾಮಾನ್ಯರ ಹಣ ಬ್ಯಾಂಕ್ ಖಾತೆಯಲ್ಲಿ ಸುರಕ್ಷಿತವಾಗಿರಬೇಕು. ಡಿಜಿಟಲೀಕರಣದ ಬಳಿಕ ಸಾಮಾನ್ಯ ಜನರಿಗೆ ವಂಚನೆ, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ಗಳ ಮೋಸದ ಪ್ರಕರಣಗಳು ವರದಿಯಾಗುತ್ತಿವೆ. ಸರ್ಕಾರದ ಖಾತೆಯಿಂದಲೂ ಹಣ ವರ್ಗಾವಣೆಯ ವಂಚನೆ ನಡೆಯುತ್ತಿವೆ. ಅದಕ್ಕೆ ತಡೆ ಹಾಕುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.












Click it and Unblock the Notifications