ರಮೇಶ್ ಜಾರಕಿಹೊಳಿ ದೂರು ನೀಡಿದರೂ ಹೊಸ ಎಫ್ಐಆರ್ ದಾಖಲಾಗೊಲ್ಲ
ಬೆಂಗಳೂರು, ಮಾರ್ಚ್ 28: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರು ನೀಡಿದರೆ ಹೊಸ ಎಫ್ಐಆರ್ ದಾಖಲಾಗುವ ಸಾಧ್ಯತೆ ಕಡಿಮೆ ಇದೆ.
ಈಗಾಗಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಯುವತಿಯ ದೂರು ಹಾಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ದೂರಿನ ಬಗ್ಗೆ ಎಸ್ಐಟಿ ವಿಚಾರಣೆ ನಡೆಸುತ್ತಿದೆ.
ಆದರೆ ಈಗ, ಡಿಕೆಶಿ ಷಡ್ಯಂತ್ರದ ಬಗ್ಗೆ ಇನ್ನಷ್ಟು ದಾಖಲೆ ನೀಡಿ ದೂರು ದಾಖಲಿಸುತ್ತೇನೆ ಎಂದು ಜಾರಕಿಹೊಳಿ ಹೇಳಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಾಗಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ಗೆ ಮನವಿ ಮಾಡಿ, ಎಫ್ಐಆರ್ನಲ್ಲಿ ಹೆಚ್ಚುವರಿ ಮಾಹಿತಿ ಸೇರಿಸುವ ಸಾಧ್ಯತೆ ಇದೆ.

ಒಂದೊಮ್ಮೆ ರಮೇಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಅವರನ್ನು ನೇರವಾಗಿ ಉಲ್ಲೇಖಿಸಿ ದೂರು ನೀಡಿದರೆ, ಕೋರ್ಟ್ಗೆ ಮನವಿ ಮಾಡಿ, ಡಿಕೆಶಿ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಲು ಪೊಲೀಸರು ಮುಂದಾಗಬಹುದು ಎನ್ನಲಾಗಿದೆ.
ಇದೆಲ್ಲವೂ ರಮೇಶ್ ಜಾರಕಿಹೊಳಿ ದೂರು ಹಾಗೂ ಅವರು ನೀಡುವ ದಾಖಲೆ ಮೇಲೆ ಅವಲಂಭಿತವಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದೆದುರು ಪ್ರತಿಭಟನೆ ನಡೆಸಿದರು.
ರಾಜ್ಯ ಬಿಜೆಪಿ ಸರ್ಕಾರ ಎಸ್ ಐಟಿ ಮೂಲಕ ಅತ್ಯಾಚಾರ ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಮೇಶ್ ಜಾರಕಿಹೊಳಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಹಿಂದೆಲ್ಲ ಆರೋಪಿಗಳನ್ನ ಹಿಡಿಯಲು ಪೊಲೀಸರ ತಂಡ ರಚನೆಯಾಗುತ್ತಿತ್ತು ಆದರೆ ಅತ್ಯಾಚಾರ ಆರೋಪಿಯ ರಕ್ಷಣೆಗಾಗಿಯೇ SIT ಎನ್ನುವ ಪೊಲೀಸರ ತಂಡ ಸೃಷ್ಟಿಯಾಗಿದ್ದು ಈ ದೇಶದ ಇತಿಹಾಸದಲ್ಲಿ ಇದೇ ಮೊದಲೇನೋ, ಬಿಜೆಪಿ ಆಡಳಿತದಲ್ಲಿ ಅತ್ಯಾಚಾರಿಯೊಬ್ಬನನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ ಎಂದು ಆರೋಪಿಸಿದೆ.












Click it and Unblock the Notifications