ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಹುಟ್ಟೂರಿಗೆ ಎಸ್ಐಟಿ
ಬೆಂಗಳೂರು, ಫೆಬ್ರವರಿ 22: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿ ಇದೀಗ ಪೊಲೀಸರ ಅತಿಥಿಯಾಗಿರುವ ಅಮೂಲ್ಯ ಲಿಯೋನಾ ಅವರ ಹುಟ್ಟೂರಿಗೆ ಎಸ್ಐಟಿ ತಂಡ ಭೇಟಿ ನೀಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆರೋಪಿ ಅಮೂಲ್ಯಾಳಿಗೆ ನಕ್ಸಲ್ ನಂಟಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿರುವುದರಿಂದ ತನಿಖಾ ತಂಡ ಪ್ರಕರಣವನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಅಮೂಲ್ಯಾಳ ಹುಟ್ಟೂರು ಕೊಪ್ಪಕ್ಕೆ ಭೇಟಿ ನೀಡಿ ತಂದೆ ತಾಯಿಯರನ್ನು ತನಿಖಾ ತಂಡ ವಿಚಾರಣೆ ಮಾಡಲಿದೆ.
ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಚಿಕ್ಕಪೇಟೆ ಎಸಿಪಿ ಮಾಂತಾ ರೆಡ್ಡಿ, ಉಪ್ಪಾರಪೇಟೆ ಇನ್ಸ್ ಪೆಕ್ಟರ್ ಸುರೇಶ್ ಹಾಗೂ ಮಾರುಕಟ್ಟೆ ಠಾಣೆಯ ಇನ್ಸ್ ಪೆಕ್ಟರ್ ಸತೀಶ್ ನೇತೃತ್ವದ ತಂಡದಿಂದ ಪ್ರಕರಣದ ತನಿಖೆ ಮಾಡಲಾಗುತ್ತಿದೆ.

ಆರೋಪಿ ಬಂಧನವಾದ ಬಳಿಕ ಪೊಲೀಸರ ಮುಂದೆ ಹಲವು ವಿಚಾರಗಳ ಕುರಿತು ಮಾಹಿತಿ ನೀಡಿದ್ದು, ಸಿಎಎ ವಿರುದ್ಧ ಕಾರ್ಯಕ್ರಮದಲ್ಲಿ ಮಾತನಾಡಲು ಹೇಳಿಕೊಡಲು ಗಾಡ್ ಫಾದರ್ ಗಳು ಇದ್ದಾರೆ ಎಂದು ಹೇಳಿಕೊಂಡಿದ್ದಾಳೆ.
ವಿಡಿಯೋದಲ್ಲಿ ಮಾತನಾಡಿದ್ದ ಅಮೂಲ್ಯ, ನನ್ನ ಭಾಷಣದ ಹಿಂದೆ ಹಲವು ಮಂದಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ನನ್ನ ಬೆನ್ನ ಹಿಂದಿದ್ದಾರೆ. ಅವರೆಲ್ಲ ನಿಜವಾದ ಹೀರೋಗಳು. ಅವರ ಪ್ರತಿನಿಧಿಯಾಗಿ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಳು.
ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಗುರುವಾರ ನಗರದ ಪ್ರೀಡಂ ಪಾರ್ಕಿನಲ್ಲಿ ಆಸಾದುದ್ದೀನ್ ಓವೈಸಿ ಭಾಗವಹಿಸಿದ್ದ ಪ್ರತಿಭಟನಾ ಕಾರ್ಯಕ್ರಮದ ವೇದಿಕೆಯಲ್ಲೇ ಅಮೂಲ್ಯ ಲಿಯೋನಾ, 'ಪಾಕಿಸ್ತಾನ ಜಿಂದಾಬಾದ್' ಎಂದು ಜೈಕಾರ ಕೂಗಿದ್ದಳು. ಕೋರ್ಟ್ ಈಕೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.












Click it and Unblock the Notifications