MLC Puttanna : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಎಂಎಲ್ಸಿ ಪುಟ್ಟಣ್ಣ
ಬೆಂಗಳೂರು, ಮಾರ್ಚ್ 09: ಬಿಜೆಪಿಯ ಹಾಲಿ ಎಂಎಲ್ಸಿ ಪುಟ್ಟಣ್ಣ ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದರು. 'ಇಂದು ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಪುಟ್ಟಣ್ಣ ಹೇಳಿಕೆ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇನೆ. ಆ ಕಾರಣ ಪಕ್ಷವನ್ನು ಸೇರ್ಪಡೆಗೊಂಡಿದ್ದೇನೆ ಎಂದೂ ಅವರು ಹೇಳಿದರು.
ಶಿಕ್ಷಣ ಕ್ಷೇತ್ರವನ್ನು ಸುಧಾರಿಸುವಲ್ಲಿ ಬಿಜೆಪಿ ಆಡಳಿತ ವಿಫಲವಾಗಿದೆ ಎಂದು ಪುಟ್ಟಣ್ಣ ಆರೋಪಿಸಿದರು. 'ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಶಿಕ್ಷಣ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಸರಕಾರ ಯಾವುದೇ ಕೆಲಸ ಮಾಡಿಲ್ಲ. ಫ್ರೀಡಂ ಪಾರ್ಕ್ನಲ್ಲಿ ಶಿಕ್ಷಕರ ಪ್ರತಿಭಟನೆ ವೇಳೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ' ಎಂದರು.

ಈ ಎಲ್ಲ ಬೆಳವಣಿಗಗಳಾದ ಮೇಲೆಯೂ ಬಿಜೆಪಿಯಲ್ಲಿ ಉಳಿಯುವುದು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿದೆ ಎಂದೂ ಪುಟ್ಟಣ್ಣ ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪುಟ್ಟಣ್ಣ ಮಾತನಾಡಿದರು. 'ರಾಜ್ಯದಲ್ಲಿ ಬಿಜೆಪಿಯ ದುರಾಡಳಿತದಿಂದ ಬೇಸೊತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ' ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲಾ, ಡಿಕೆ ಸುರೇಶ್, ಪ್ರಿಯಾಂಕಾ ಖರ್ಗೆ ಮತ್ತು ಸಲೀಂ ಅಹ್ಮದ್ ಅವರ ಸಮ್ಮುಖದಲ್ಲಿ ಪುಟ್ಟಣ್ಣ ಕಾಂಗ್ರೆಸ್ ಸೇರಿದರು.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕವು, 'ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪುಟ್ಟಣ್ಣ ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು' ಎಂದು ತಿಳಿಸಿದೆ. ಇದಕ್ಕೆ ಸಂಬಂಧಿಸಿದ ಫೋಟೊಗಳನ್ನೂ ಕಾಂಗ್ರೆಸ್ ಹಂಚಿಕೊಂಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ @siddaramaiah ಅವರು ಬಿಜೆಪಿ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪುಟ್ಟಣ್ಣ ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು. pic.twitter.com/MF9858qxhz
— Karnataka Congress (@INCKarnataka) March 9, 2023
'ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್, ಸಂಸದರಾದ ಡಿಕೆ ಸುರೇಶ್, ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂಎಲ್ಸಿ ಎಸ್. ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಪುಟ್ಟಣ್ಣ ಸೇರ್ಪಡೆಗೆ ವಿರೋಧ
ಎಂಎಲ್ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ಪ್ರಾರಂಭದಲ್ಲೇ ವಿರೋಧ ವ್ಯಕ್ತವಾಗಿದೆ. ರಾಜಾಜಿನಗರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಮುಂಭಾಗ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮುತ್ತಿಗೆ ಹಾಕಲು ರಾಜಾಜಿನಗರದ ಕಾಂಗ್ರೆಸ್ ಮುಖಂಡರು ಯತ್ನಿಸಿದರು. ರಾಜಾಜಿನಗರದ ಟಿಕೆಟ್ ಅನ್ನು ಪುಟ್ಟಣ್ಣಗೆ ನೀಡಬೇಡಿ ಎಂದು ಗಲಾಟೆ ಮಾಡಿದರು.












Click it and Unblock the Notifications