ಎಸ್.ಎಂ.ಕೃಷ್ಣ ಸಹೋದರ, ಮಾಜಿ ವಿಧಾನ ಪರಿಷತ್ ಸದಸ್ಯ ಶಂಕರ್ ನಿಧನ
ಬೆಂಗಳೂ, ಜೂನ್ 22: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಹೋದರ ಮಾಜಿ ವಿಧಾನಪರಿಷತ್ ಸದಸ್ಯ ಎಸ್.ಎಂ.ಶಂಕರ್ ಅವರು ವಿಧಿವಶರಾಗಿದ್ದಾರೆ.
ಎಸ್.ಎಂ.ಕೃಷ್ಣ ಅವರು ರಾಜ್ಯ ಮುಖ್ಯಮಂತ್ರಿ ಆಗಿದ್ದಾಗ ಎಸ್.ಎಂ.ಶಂಕರ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಲಾಗಿತ್ತು. ಆ ಅವಧಿಯ ನಂತರ ಮತ್ತೆ ಶಂಕರ್ ಅವರು ಸಕ್ರಿಯ ರಾಜಕಾರಣದಲ್ಲಿ ಕಾಣಿಸಿಕೊಂಡಿರಲಿಲ್ಲ.
ಶನಿವಾರದ ಜನತಾ ದರ್ಶನ, ಗ್ರಾಮ ವಾಸ್ತವ್ಯ ಮುಂದೂಡಿದ ಸಿಎಂ
ಶಂಕರ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 6 ಗಂಟೆಗೆ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಎಸ್.ಎಂ.ಶಂಕರ್ ಅವರ ಅಗಲಿಕೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ಅವರು, ಈ ಹಿಂದೆ ವಿಧಾನ ಪರಿಷತ್ತಿನ ಸದಸ್ಯರಾಗಿದ್ದ ಎಸ್ ಎಂ ಶಂಕರ್ ಅವರ ನಿಧನಕ್ಕೆ ನನ್ನ ತೀವ್ರ ಸಂತಾಪಗಳು. ದೇವರು ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯನ್ನು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಶಂಕರ್ ಅವರ ಅಂತಿಮ ವಿಧಿ ವಿಧಾನಗಳು ಇಂದು ಸಂಜೆ ವೇಳೆಗೆ ನೆರವೇರುವ ಸಾಧ್ಯತೆ ಇದೆ.