ಕರೆ ಸ್ವೀಕರಿಸದ ಆರೋಪ: ಸೋಮಶೇಖರ್ ಕೋಪ ಶಮನ ಮಾಡಿದ ಕೆ.ಸುಧಾಕರ್
ಬೆಂಗಳೂರು ಫೆಬ್ರವರಿ 03: ತಮ್ಮ ಕರೆ ಸ್ವೀಕರಿಸದ್ದಕ್ಕೆ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶಗೊಂಡ ಬೆನ್ನಲ್ಲೆ ಇಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮಶೇಖರ್ ರೆಡ್ಡಿ ಅವರು ಆರೋಗ್ಯ ಸರಿ ಇಲ್ಲದ ಸಮಯದಲ್ಲಿ ನನಗೆ ಕರೆ ಮಾಡಿದ್ದರು. ಅವರು ನನ್ನ ಆತ್ಮೀಯ ಸ್ನೇಹಿತರು ಎಂದು ಸುಧಾಕರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ ಸುಧಾಕರ್, 'ಸೋಮಶೇಖರ್ ರೆಡ್ಡಿ ನನಗೆ ಕರೆ ಮಾಡಿದ್ದರು. ಆಗ ನನಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ನಾನು ಮಾತನಾಡಲಿಲ್ಲ. ಬಳಿಕ ನಾನು ಅವರೊಂದಿಗೆ ಮಾತನಾಡಿದ್ದೇನೆ. ಸದ್ಯ ಯಾವುದೇ ಸಮಸ್ಯೆ ಇಲ್ಲ. ಅವರು ನನ್ನ ಆಪ್ತ ಸ್ನೇಹಿತರು' ಎಂದು ಅವರು ಹೇಳಿದ್ದಾರೆ.
ನಿನ್ನೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಡಾ. ಕೆ ಸುಧಾಕರ್ ಮೇಲೆ ಕರೆ ಸ್ವೀಕರಿಸಿದ ಆರೋಪವನ್ನು ಮಾಡಿದ್ದರು. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಹಾಗೂ ಎಂಡಿ ಸೀಟ್ಗಳ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಚರ್ಚಿಸಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರಿಗೆ ಕರೆ ಮಾಡಿದ್ದೆ. ಅವರು ನನ್ನ ಕರೆ ಸ್ವೀಕರಿಸಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇವಲ 30 ಸೆಕೆಂಡ್ನಲ್ಲಿ ಕೆಲಸ ಮಾಡಿಕೊಟ್ಟರು. ಇವರೇನೂ ಸಿಎಂಗಿಂತ್ಲೂ ದೊಡ್ಡವರಾ? ಇವರ ವರ್ತನೆ ವಿರುದ್ಧ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ನಮ್ಮ ಸಮಸ್ಯೆ ಹೇಳಿಕೊಂಡೆವು. ಅವರು ತಕ್ಷಣ ಸಮಸ್ಯೆಗೆ ಸ್ಪಂದಿಸಿದರು. ಸಚಿವ ಸುಧಾಕರ್ ಅವರ ವರ್ತನೆಯ ಬಗ್ಗೆ ನನಗೆ ಆಕ್ಷೇಪವಿದೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ನಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದರು.

ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕರ ಮನವಿಗೆ ಸ್ಪಂದಿಸದ ಹಾಗೂ ಕ್ಷೇತ್ರದ ಕೆಲಸ ಮಾಡಿಕೊಡದ ಕೆಲ ದುರಹಂಕಾರಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕೆಲವು ಸಚಿವರು ತಮ್ಮಿಂದಲೇ ಸರ್ಕಾರ ಬಂದಿದೆ. ತಮ್ಮಿಂದಲೇ ಎಲ್ಲವೂ ನಡೆಯುತ್ತದೆ ಎಂಬ ಅಹಂನಲ್ಲಿದ್ದಾರೆ. ನಾನು ಎಲ್ಲ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಕೆಲವು ಸಚಿವರು ನಮ್ಮ ಮನವಿಗೆ ಸ್ಪಂದಿಸಿ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಾರೆ. ಅಂಥವರ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications