ಅಪಘಾತ : ಕೇರಳ ಹೈಕೋರ್ಟ್ ಜಡ್ಜ್ ಪುತ್ರ ಸಾವು
ಬೆಂಗಳೂರು, ಜೂ.16 : ಬೆಂಗಳೂರಿನ ಡೈರಿ ಸರ್ಕಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೇರಳ ಹೈಕೋರ್ಟ್ ನ್ಯಾಯಮೂರ್ತಿಗಳ ಪುತ್ರ ಮೃತಪಟ್ಟಿದ್ದಾರೆ. ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಬಾಬು ಮ್ಯಾಥ್ಯೂ ಅವರ ಪುತ್ರ ಆನಂದ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ. ಆನಂದ್ ಕ್ರೈಸ್ಟ್ ಕಾಲೇಜಿನಲ್ಲಿ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿದ್ದರು.

ಸೋಮವಾರ ರಾತ್ರಿ ಡೈರಿ ಸರ್ಕಲ್ ಬಳಿ ಸ್ನೇಹಿತರ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್ ಆನಂದ್ ಇದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಸೆಂಟ್ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. [ಆಡಿ ಗುದ್ದಿ ಇಬ್ಬರ ಸಾವಿಗೆ ಕಾರಣಳಾದ ವಕೀಲೆ]
ಮಂಗಳವಾರ ಬೆಳಗ್ಗೆ ಸ್ನೇಹಿತರೊಂದಿಗೆ ಬೆಂಗಳೂರಿಗೆ ಆಗಮಿಸಿದ ನ್ಯಾಯಮೂರ್ತಿ ಬಾಬು ಮ್ಯಾಥ್ಯೂ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತದೇಹದ ಅಂತಿಮ ದರ್ಶನ ಪಡೆದರು. ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಸೆಂಟ್ಜಾನ್ಸ್ ಆಸ್ಪತ್ರೆಯಲ್ಲಿ ಆನಂದ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಶವವನ್ನು ಹಸ್ತಾಂತರ ಮಾಡಲಾಗಿದೆ. ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಆನಂದ್ ಸ್ನೇಹಿತ ಅಪಘಾತದಲ್ಲಿ ಗಾಯಗೊಂಡಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications