ಸೌಜನ್ಯ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಮರು ತನಿಖೆ ಸಂಬಂಧ ಸರ್ಕಾರಕ್ಕೆ ಕೋರ್ಟ್ ನೋಟಿಸ್
ಬೆಂಗಳೂರು, ಫೆಬ್ರವರಿ 21: ಹನ್ನೆರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಮೃತಳ ತಂದೆ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಮೃತಳ ತಂದೆ ಸೌರ್ಜನ್ಯ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿತು.

ಮೇಲ್ಮನವಿ ವಿಚಾರಣೆ ಬಾಕಿ
ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.
ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನ್ಯಾಯಪೀಠ ಸೂಚಿಸಿದೆ. ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.
ಅರ್ಜಿದಾರರು, ಪ್ರಾಸಿಕ್ಯೂಷನ್ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ತನಿಖೆಯನ್ನು ಸಮರ್ಪಕವಾಗಿ ಮಾಡಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಇಡೀ ತನಿಖೆ ನ್ಯಾಯೋಚಿತವಾಗಿ ತನಿಖೆ ನಡೆಸಿಲ್ಲ ಎಂಬುದು ಸ್ಪಷ್ಟವಾಗಲಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿದ್ದಾರೆ.
ಪ್ರಕರಣದ ಹಿನ್ನೆಲೆ ಏನು..?
2012ರ ಅ.9ರಂದು ಸೌಜನ್ಯಅನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಅನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸೆಷನ್ಸ್ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ 2023ರ ಜೂ.16ರಂದು ಆದೇಶಿಸಿತ್ತು.












Click it and Unblock the Notifications