ಕಾಂಗ್ರೆಸ್ ಸೇರಿದ ಎಸ್ಪಿ ಮುದ್ದಹನುಮೇಗೌಡ; ಕನಿಷ್ಠ 20 ಸ್ಥಾನ ಗೆಲ್ತೇವೆ ಎಂದ ಸಿಎಂ ಸಿದ್ದರಾಮಯ್ಯ
ತುಮಕೂರು ಮಾಜಿ ಸಂಸದ ಎಸ್ಪಿ ಮುದ್ದಹನುಮೇಗೌಡ ಮತ್ತೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ನಂತರದ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಈ ಬಾರಿ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಮೂಲಗಳ ಪ್ರಕಾರ ಎಸ್ಪಿ ಮುದ್ದಹನುಮೇಗೌಡರು ಈ ಬಾರಿ ತುಮಕೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಅಭ್ಯರ್ಥಿಯಾಗಲಿದ್ದಾರೆ. ಟಿಕೆಟ್ ನೀಡುವ ಭರವಸೆ ನೀಡಿಯೇ ಅವರನ್ನು ಪಕ್ಷಕ್ಕೆ ಕರೆತರಲಾಗಿದೆ ಎನ್ನಲಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದ್ದಹನುಮೇಗೌಡರನ್ನು ಸಿಎಂ ಸಿದ್ದರಾಮಯ್ಯ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
20 ಸ್ಥಾನ ಗೆಲ್ಲುತ್ತೇವೆ ಎಂದ ಸಿಎಂ
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತದೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಒಗ್ಗಟ್ಟಿನಿಂದ ಗೆಲ್ಲಲೇಬೇಕು ಎಂಬ ಛಲದಿಂದ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.
ಮುದ್ದಹನುಮೇಗೌಡರನ್ನು ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಮುದ್ದಹನುಮೇಗೌಡರು ಮೂಲತಃ ಕಾಂಗ್ರೆಸ್ನವರು. ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಸೇರಿದ್ದರು. ಅವರ ತಪ್ಪಿನ ಅರಿವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದಾರೆ. ತಪ್ಪು ಮಾಡಿದ್ದೇನೆ, ಕ್ಷಮೆ ಇರಲಿ ಎಂದು ಅವರು ಹೇಳಿದ್ದಾರೆ. ತಪ್ಪು ಮಾಡಿದ ಮೇಲೆ ಪಶ್ಚಾತ್ತಾಪ ಮುಖ್ಯ. ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಮತ್ತೊಂದಿಲ್ಲ. ಪಕ್ಷಕ್ಕೆ ಯಾರೇ ಬಂದರೂ ಸೇರಿಸಿಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಮುದ್ದಹನುಮೇಗೌಡರನ್ನು ಸೇರಿಸಿಕೊಳ್ಳಲು ಒಪ್ಪಿದ್ದಾರೆ ಎಂದು ಹೇಳಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯವರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಅಭ್ಯರ್ಥಿ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ. ಒಳ್ಳೆಯ ವಾತಾವರಣವಿದೆ. ಸರ್ಕಾರ ಕೂಡ ಜನಪರವಾದ ಕೆಲಸಗಳನ್ನು ಮಾಡಿದೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ ಇಡೀ ರಾಜ್ಯದಲ್ಲಿ ಒಳ್ಳೆಯ ವಾತಾವರಣವಿದೆ ಎಂದರು.
ಇತ್ತೀಚೆಗೆ ವಿವಿಧೆಡೆ ಹಮ್ಮಿಕೊಂಡಿದ್ದ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಬಹಳ ಜನ ಸೇರಿದ್ದರು. ಜನ ಸುಮ್ಮನೆ ಸೇರುವುದಿಲ್ಲ. ಜನರಿಗೆ ನಾವು ಮಾಡಿರುವ ಕೆಲಸಗಳ ಬಗ್ಗೆ ಸಮಾಧಾನ ಇದೆ. ಆ ಸಮಾಧಾನ ಇರುವುದರಿಂದಲೇ ಎಲ್ಲೇ ಸಭೆಗಳನ್ನು ಆಯೋಜಿಸಿದರೂ ಜನ ಸೇರಿದ್ದಾರೆ. ಮಂಗಳೂರು, ಮಳವಳ್ಳಿಯಲ್ಲಿಯೂ ಬೃಹತ್ ಸಂಖ್ಯೆಯಲ್ಲಿ ಜನ ಸೇರಿದ್ದರು ಎಂದು ಹೇಳಿದರು.












Click it and Unblock the Notifications